ADVERTISEMENT

ವಿಫಲರಾದರೆ ಆತ್ಮವಿಶ್ವಾಸ ಕಳೆದುಕೊಳ್ಳದಿರಿ: ಸಂತೋಷ ತಟ್ಟೆಪಳ್ಳಿ

ಜ್ಞಾನಸುಧಾ ಅಕಾಡೆಮಿಯಲ್ಲಿ ಪಿಎಸ್‍ಐ ತರಬೇತಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 15:13 IST
Last Updated 1 ಫೆಬ್ರುವರಿ 2021, 15:13 IST
ಬೀದರ್‌ನ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಜ್ಞಾನಸುಧಾ ಸಿವಿಲ್ ಸರ್ವಿಸಸ್ ಅಕಾಡೆಮಿ ವತಿಯಿಂದ ಸೋಮವಾರ ಆಯೋಜಿಸಿದ್ದ ಪಿಎಸ್‍ಐ ಪರೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಸಂತೋಷ ತಟ್ಟೆಪಳ್ಳಿ ಅವರನ್ನು ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಹಾಗೂ ನಿರ್ದೇಶಕ ಮುನೇಶ್ವರ ಲಾಖಾ ಸನ್ಮಾನಿಸಿದರು
ಬೀದರ್‌ನ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಜ್ಞಾನಸುಧಾ ಸಿವಿಲ್ ಸರ್ವಿಸಸ್ ಅಕಾಡೆಮಿ ವತಿಯಿಂದ ಸೋಮವಾರ ಆಯೋಜಿಸಿದ್ದ ಪಿಎಸ್‍ಐ ಪರೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಸಂತೋಷ ತಟ್ಟೆಪಳ್ಳಿ ಅವರನ್ನು ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಹಾಗೂ ನಿರ್ದೇಶಕ ಮುನೇಶ್ವರ ಲಾಖಾ ಸನ್ಮಾನಿಸಿದರು   

ಬೀದರ್: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎರಡು-ಮೂರು ಸಲ ವಿಫಲರಾದರೆ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಸಾಧನೆ ಮುಂದಕ್ಕೆ ಹೋಗಿದೆ ಎಂದು ಭಾವಿಸಿ ಮರಳಿ ಪ್ರಯತ್ನ ಮಾಡಬೇಕು ಎಂದು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಸಂತೋಷ ತಟ್ಟೆಪಳ್ಳಿ ನುಡಿದರು.

ಇಲ್ಲಿಯ ಶಿವನಗರದಲ್ಲಿ ಇರುವ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಜ್ಞಾನಸುಧಾ ಸಿವಿಲ್ ಸರ್ವಿಸಸ್ ಅಕಾಡೆಮಿ ವತಿಯಿಂದ ಸೋಮವಾರ ಆಯೋಜಿಸಿದ್ದ ಪಿಎಸ್‍ಐ ಪರೀಕ್ಷೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಯತ್ನದಲ್ಲಿ ತೊಡಗಿದಾಗ ಹಲವು ಅಡೆ ತಡೆಗಳು ಬರುವುದು ಸ್ವಾಭಾವಿಕ ಎಂದು ಹೇಳಿದರು.

ಪದವಿ ವ್ಯಾಸಂಗ ಮಾಡುತ್ತಿದ್ದಾಗಲೇ ಪಠ್ಯಕ್ರಮದ ಜತೆಗೆ ಯುಪಿಎಸ್‍ಸಿ, ಕೆಪಿಎಸ್‍ಸಿ, ಪೊಲೀಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ನಡೆಸಿದ್ದಲ್ಲಿ ಉನ್ನತ ಹುದ್ದೆ ಪಡೆಯಲು ಸಾಧ್ಯವಿದೆ. ಜಿಲ್ಲೆಯ ಪದವಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡಿಕೊಳ್ಳದೆ, ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸಬೇಕು ಎಂದು ಸಲಹೆ ಮಾಡಿದರು.

ADVERTISEMENT

ಜ್ಞಾನಸುಧಾ ಶಿಕ್ಷಣ ಸಂಸ್ಥೆಯು ಸಿವಿಲ್ ಸರ್ವಿಸಸ್ ಅಕಾಡೆಮಿ ಸ್ಥಾಪಿಸಿ ಜಿಲ್ಲೆಯ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ತರಬೇತಿಯ ಒಳ್ಳೆಯ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಕಷ್ಟಪಟ್ಟು ಓದಿದ್ದಲ್ಲಿ ಭವಿಷ್ಯದಲ್ಲಿ ಉನ್ನತ ಹುದ್ದೆ ಪಡೆದು ಸುಖಮಯ ಜೀವನ ನಡೆಸಬಹುದಾಗಿದೆ ಎಂದು ಹೇಳಿದರು.

ಪ್ರಸ್ತುತ ಬಹುತೇಕ ವಿದ್ಯಾರ್ಥಿಗಳು ಎಂಜಿನಿಯರ್ ಇಲ್ಲವೇ ವೈದ್ಯ ಆಗುವ ಗುರಿ ಇಟ್ಟುಕೊಳ್ಳುತ್ತಿದ್ದಾರೆ. ಈ ಎರಡನ್ನು ಹೊರತುಪಡಿಸಿ ಇತರ ಕ್ಷೇತ್ರಗಳಲ್ಲೂ ಸಾಧನೆಗೆ ವಿಪುಲ ಅವಕಾಶಗಳು ಇವೆ ಎಂದು ತಿಳಿಸಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಹುದ್ದೆಗಳನ್ನು ಪಡೆಯಬೇಕು ಎಂದು ಹೇಳಿದರು.

ಯುಪಿಎಸ್‍ಸಿ, ಕೆಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಅಭ್ಯರ್ಥಿಗಳ ಆಯ್ಕೆಗೆ ನೆರವಾಗಲು ಜ್ಞಾನಸುಧಾ ಸಿವಿಲ್ ಸರ್ವಿಸಸ್ಸ್ ಅಕಾಡೆಮಿ ಪ್ರಾರಂಭಿಸಲಾಗಿದೆ. ನುರಿತ, ಅನುಭವಿ ವಿಷಯ ತಜ್ಞರಿಂದ ಉತ್ಕøಷ್ಟ ತರಬೇತಿ ನೀಡಲಾಗುತ್ತಿದೆ. ಎಂದು ತಿಳಿಸಿದರು.

ಅಕಾಡೆಮಿಯ ಕಾರ್ಯಕ್ರಮ ನಿರ್ದೇಶಕ ಬಾಲಾಜಿ ಮಾನಕರಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.