ADVERTISEMENT

ಜನರಿಗೆ ಸಮರ್ಪಕ ಸೇವೆ ನೀಡಿ: ದಲಿತ ಸಂಘರ್ಷ ಸಮಿತಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 13:31 IST
Last Updated 2 ಸೆಪ್ಟೆಂಬರ್ 2020, 13:31 IST
ಗ್ರಾಮೀಣ ಭಾಗದ ಬ್ಯಾಂಕ್‌ಗಳಲ್ಲಿ ಗ್ರಾಹಕರಿಗೆ ಸಮರ್ಪಕ ಸೇವೆ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಈಚೆಗೆ ತಹಶೀಲ್ದಾರ್ ಎಂ.ಚಂದ್ರಶೇಖರ್ ಅವರಿಗೆ ಮನವಿಪತ್ರ ಸಲ್ಲಿಸಿದರು
ಗ್ರಾಮೀಣ ಭಾಗದ ಬ್ಯಾಂಕ್‌ಗಳಲ್ಲಿ ಗ್ರಾಹಕರಿಗೆ ಸಮರ್ಪಕ ಸೇವೆ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಈಚೆಗೆ ತಹಶೀಲ್ದಾರ್ ಎಂ.ಚಂದ್ರಶೇಖರ್ ಅವರಿಗೆ ಮನವಿಪತ್ರ ಸಲ್ಲಿಸಿದರು   

ಔರಾದ್: ‘ಸಾಲ ನೀಡುವುದು ಸೇರಿದಂತೆ ಬ್ಯಾಂಕ್‌ಗಳಲ್ಲಿ ರೈತರಿಗೆ ಹಾಗೂ ಇತರ ಗ್ರಾಹಕರಿಗೆ ಸಮರ್ಪಕ ಸೇವೆ ನೀಡಬೇಕು’ ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ ವಗ್ಗೆ, ಸುನೀಲ ಮಿತ್ರಾ, ರವಿ ದೇವ್ರೆ ಈಚೆಗೆ ತಹಶೀಲ್ದಾರ್ ಎಂ.ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.

ತಾಲ್ಲೂಕಿನ ಕೌಠಾ (ಬಿ) ಕೆನರಾ ಬ್ಯಾಂಕ್‌ನಲ್ಲಿ ಸಿಬ್ಬಂದಿ ಗ್ರಾಹಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಗ್ರಾಮೀಣ ಭಾಗದ ಜನ ಬ್ಯಾಂಕ್‌ಗೆ ಬಂದಾಗ ಅವರಿಗೆ ತಿಳಿ ಹೇಳಿ ಸೂಕ್ತ ಸೇವೆ ನೀಡುವುದು ಬ್ಯಾಂಕ್ ಸಿಬ್ಬಂದಿ ಕರ್ತವ್ಯ. ಆದರೆ ಅಲ್ಲಿ ಹಾಗಾಗುತ್ತಿಲ್ಲ’ ಎಂದು ದೂರಿದ್ದಾರೆ.

ADVERTISEMENT

ಕೊರೊನಾ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಸೂಕ್ತ ತಿಳವಳಿಕೆ ನೀಡಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಬೇಕು. ಗ್ರಾಹಕರ ಕೆಲಸ ಬೇಗನೆ ಮಾಡಿಕೊಟ್ಟು ಬ್ಯಾಂಕ್‌ನಲ್ಲಿ ಜನ ಸೇರದಂತೆ ನೋಡಿಕೊಳ್ಳಲು ತಾಲ್ಲೂಕಿನ ಎಲ್ಲ ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.