ಭಾಲ್ಕಿ: ಭೂಮಿಯ ಮೇಲಿನ ಸಕಲ ಜೀವಿಗಳ ಉಳಿವು, ಬೆಳವಣಿಗೆಗಾಗಿ ಪರಿಸರವನ್ನು ಸಂರಕ್ಷಿಸಿ ಬೆಳೆಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಕಾಡಲೂರು ಸತ್ಯನಾರಾಯಣಾಚಾರ್ಯ ಹೇಳಿದರು.
ತಾಲ್ಲೂಕಿನ ವಿವಿಧೆಡೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆ, ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನಶೈಲಿಯೊಂದಿಗೆ ಸ್ವಚ್ಛ ಹಾಗೂ ಉತ್ತಮ ಪರಿಸರದ ಅಗತ್ಯವಿದೆ. ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಗಿಡ-ಮರಗಳನ್ನು ಹೆಚ್ಚು-ಹೆಚ್ಚಾಗಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ತಾಲ್ಲೂಕಿನ ಧನ್ನೂರಾ ಸಾರ್ವಜನಿಕ ಆಸ್ಪತ್ರೆ, ಹಲಬರ್ಗಾ ಸರ್ಕಾರಿ ಪದವಿ ಪೂರ್ವ ಕಾಲೇಜು, ಭಾತಂಬ್ರಾ ಸಾರ್ವಜನಿಕ ಆಸ್ಪತ್ರೆ, ಡಾವರಗಾಂವ ಸರ್ಕಾರಿ ಆಸ್ಪತ್ರೆಗಳಲ್ಲಿ 600 ಸಸಿಗಳನ್ನು ಹಾಗೂ ಚಳಕಾಪೂರ, ಕಟ್ಟಿ ತುಗಾಂವ ರಸ್ತೆಯ ಬದಿಯಲ್ಲಿ 900 ಗಿಡಗಳನ್ನು ನೆಡಲು ಚಾಲನೆ ನೀಡಲಾಯಿತು.
ವೈದ್ಯರಿಗೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಕೋವಿಡ್ ಲಸಿಕೆ ತೆಗೆದುಕೊಂಡವರಿಗೆ ಸಸಿಗಳನ್ನು ವಿತರಿಸಲಾಯಿತು.
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಮಂಜುನಾಥ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಅಂಬಲಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಸಿವಿಲ್ ನ್ಯಾಯಾಧೀಶ ಪ್ರಶಾಂತ ಬಾದವಾಡಗಿ, ಡಿವೈಎಸ್ಪಿ ಡಾ.ದೇವರಾಜ್ ಬಿ., ಎಪಿಪಿಗಳಾದ ಶಿವಾಜಿರಾಜ ಶೆಟಕಾರ, ಉಪ ಪೊಲೀಸ್ ಉಪಾಧೀಕ್ಷಕ ಬಾಲಾಜಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಪ್ರಕಾಶ ನಿಪ್ಪಾಣಿ, ಪ್ರಾದೇಶಿಕ ಅರಣ್ಯಾಧಿಕಾರಿ ಶಿವಾನಂದ ಗೋರನಾಳಕರ, ವಕೀಲರ ಸಂಘದ ಉಪಾಧ್ಯಕ್ಷ ರಾಹುಲ್ ಸಾವಳೆ ಉಪಸ್ಥಿತರಿದ್ದರು. ಪರಿಸರವಾದಿ ಶೈಲೆಂದ್ರ ಕಾವಡಿ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.