ADVERTISEMENT

ಜಿಲ್ಲೆಯಲ್ಲಿ ರಸಗೊಬ್ಬರ ತಯಾರಿಕೆ ಘಟಕ ಸ್ಥಾಪಿಸಿ: ಅರವಿಂದಕುಮಾರ ಅರಳಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2021, 13:06 IST
Last Updated 3 ನವೆಂಬರ್ 2021, 13:06 IST
ಬೀದರ್‌ನಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರಿಗೆ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮನವಿ ಪತ್ರ ಸಲ್ಲಿಸಿದರು
ಬೀದರ್‌ನಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರಿಗೆ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮನವಿ ಪತ್ರ ಸಲ್ಲಿಸಿದರು   

ಬೀದರ್: ಜಿಲ್ಲೆಯಲ್ಲಿ ರಸಗೊಬ್ಬರ ತಯಾರಿಕೆ ಘಟಕ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಒತ್ತಾಯಿಸಿದ್ದಾರೆ.

ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರಿಗೆ ನಗರದಲ್ಲಿ 13 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿ, ಜಿಲ್ಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಜಿಲ್ಲೆಯಲ್ಲಿ ಸಿಪೆಟ್ ಸ್ಥಾಪಿಸಬೇಕು. 2013 ರಲ್ಲಿ ಜಿಲ್ಲೆಗೆ ಮಂಜೂರಾದ ಮೌಲಾನಾ ಆಜಾದ್ ನ್ಯಾಷನಲ್ ಉರ್ದು ವಿಶ್ವವಿದ್ಯಾಲಯದ ಸೆಟ್‍ಲೈಟ್ ಕೇಂದ್ರ ಶೀಘ್ರ ಆರಂಭಿಸಬೇಕು. ಉಡಾನ್ ಯೋಜನೆಯಡಿ ಪ್ರಾರಂಭವಾಗಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಬಂದ್ ಆಗಿರುವ ಕಾರಣ, ಇಂಡಿಗೊ ಅಥವಾ ಸ್ಟಾರ್ ಏಸ್ ಸಂಸ್ಥೆಗಳಿಂದ ಬೀದರ್-ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಪ್ರಾರಂಭಿಸಬೇಕು.

ADVERTISEMENT

ಬೀದರ್-ಕಲಬುರ್ಗಿ ರೈಲು ಸೋಲಾಪೂರ ವರೆಗೆ ವಿಸ್ತರಿಸಬೇಕು. ಬೀದರ್-ಹುಬ್ಬಳ್ಳಿ ಹೊಸ ರೈಲು ಆರಂಭಿಸಬೇಕು. ನನೆಗುದಿಗೆ ಬಿದ್ದಿರುವ ಬೀದರ್-ನಾಂದೇಡ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬೇಗ ಮುಗಿಸಬೇಕು. ಬೀದರ್‌ನಲ್ಲಿ ವರ್ತುಲ ರಸ್ತೆ ಸಂಪೂರ್ಣಗೊಳಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರೈತರ ಕೃಷಿ ಉತ್ಪನ್ನ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಲಾಭ ನಿಗದಿತ ಸಮಯದೊಳಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನಃಶ್ಚೇತನಕ್ಕೆ ರಾಜ್ಯ ಸರ್ಕಾರದಿಂದ ರೂ. 100 ಕೋಟಿ ಅನುದಾನ ಕೊಡಿಸಬೇಕು ಎಂದು ಬೇಡಿಕೆ ಮಂಡಿಸಿದರು. ಜಿಲ್ಲೆಯಲ್ಲಿ ಬಹಳಷ್ಟು ಆಭಿವೃದ್ಧಿ ಆಗಬೇಕಿದೆ. ಜಿಲ್ಲೆಯ ಇಂದಿನ ಸ್ಥಿತಿಗೆ ಅಭಿವೃದ್ಧಿ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ತಮಗೆ ಮಹತ್ವದ ಸ್ಥಾನ ನೀಡಿದ್ದರಿಂದ ಯುವಕರಲ್ಲಿ ಜಿಲ್ಲೆಯ ಅಭಿವೃದ್ಧಿ ಕುರಿತು ಒಲವು ಮೂಡಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.