ADVERTISEMENT

ಬೀದರ್‌ನಲ್ಲಿ ಐಟಿ, ಬಿಟಿ ಕಂಪನಿ ಸ್ಥಾಪನೆ: ಡಾ. ಸಿ.ಎನ್. ಅಶ್ವಥ್ ನಾರಾಯಣ ಭರವಸೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 15:33 IST
Last Updated 4 ಸೆಪ್ಟೆಂಬರ್ 2020, 15:33 IST
ಸಂಸದ ಭಗವಂತ ಖೂಬಾ ಅವರು ಬೆಂಗಳೂರಿನಲ್ಲಿ ಶುಕ್ರವಾರ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ಬೀದರ್‌ನಲ್ಲಿ ಐಟಿ, ಬಿಟಿ ಕಂಪನಿಗಳನ್ನು ಸ್ಥಾಪಿಸುವಂತೆ ಮನವಿ ಮಾಡಿದರು
ಸಂಸದ ಭಗವಂತ ಖೂಬಾ ಅವರು ಬೆಂಗಳೂರಿನಲ್ಲಿ ಶುಕ್ರವಾರ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ಬೀದರ್‌ನಲ್ಲಿ ಐಟಿ, ಬಿಟಿ ಕಂಪನಿಗಳನ್ನು ಸ್ಥಾಪಿಸುವಂತೆ ಮನವಿ ಮಾಡಿದರು   

ಬೀದರ್: ಬೀದರ್‌ನಲ್ಲಿ ಐಟಿ, ಬಿಟಿ ಕಂಪನಿಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಅವರನ್ನು ಭೇಟಿಯಾಗಿ ಮಾಡಿದ ಮನವಿಗೆ ಸ್ಪಂದಿಸಿ ಬೀದರ್‍ನಲ್ಲಿ ಬಂಡವಾಳ ಹೂಡಿಕೆಗೆ ಬಂಡವಾಳದಾರರಿಗೆ ಉತ್ತೇಜನ ನೀಡುವುದಾಗಿ ಆಶ್ವಾಸನೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಎಂಜಿನಿಯರಿಂಗ್, ತಂತ್ರಜ್ಞಾನದ ಜ್ಞಾನ ಇರುವ ಸಾಕಷ್ಟು ಯುವಕರು ಇದ್ದಾರೆ. ಸದ್ಯ ದೂರದ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬೀದರ್‌ನಲ್ಲೇ ಐಟಿ,ಬಿಟಿ ಕಂಪನಿಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ADVERTISEMENT

ಬೀದರ್‍ನಿಂದ ನಾಗರಿಕ ವಿಮಾನಯಾನ ಸೇವೆ ಸಹ ಆರಂಭವಾಗಿದೆ. ನೆರೆಯ ತೆಲಂಗಾಣದ ಹೈದರಾಬಾದ್ 140 ಕಿ.ಮೀ. ಅಂತರದಲ್ಲಿ ಇದೆ. ಜಿಲ್ಲೆ ಎರಡೂ ರಾಜ್ಯಗಳ ರಾಜಧಾನಿಗಳ ನಡುವೆ ವ್ಯವಹಾರ ಕೇಂದ್ರವಾಗಿದೆ ಎನ್ನುವುದನ್ನು ಮನವರಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬೀದರ್‌ನಲ್ಲಿ ಹೊಸ ತಂತ್ರಜ್ಞಾನ ಆಧಾರಿತ ಐಟಿ, ಬಿಟಿ ಕಂಪನಿಗಳನ್ನು ಸ್ಥಾಪಿಸಿದರೆ ಕಲ್ಯಾಣ ಕರ್ನಾಟಕಕ್ಕೆ ಒಳ್ಳೆಯ ಕೊಡುಗೆಯಾಗಲಿದೆ. ಈ ಭಾಗದ ಯುವಕರಿಗೆ ಪ್ರೋತ್ಸಾಹಿಸಿದಂತೆಯೂ ಆಗಲಿದೆ ಎಂದು ಗಮನ ಸೆಳೆದಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.