ADVERTISEMENT

ಮಾಲಿನ್ಯ ತಡೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ

ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಸಿ.ಮಲ್ಲಿಕಾರ್ಜುನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 15:46 IST
Last Updated 28 ನವೆಂಬರ್ 2020, 15:46 IST
ಬೀದರ್‌ನ ಶಾಹೀನ್ ಕಾಲೇಜಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಸಿ.ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು
ಬೀದರ್‌ನ ಶಾಹೀನ್ ಕಾಲೇಜಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಸಿ.ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು   

ಬೀದರ್‌: ‘ಪರಿಸರ ಉಳಿದರೆ ಪ್ರತಿಯೊಂದು ಜೀವ ಉಳಿಯುತ್ತದೆ. ಹೀಗಾಗಿ ಪರಿಸರ ಮಾಲಿನ್ಯ ತಡೆಗೆ ಎಲ್ಲರ ಸಹಕಾರ ಅಗತ್ಯ ಇದೆ’ ಎಂದು ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಸಿ. ಮಲ್ಲಿಕಾರ್ಜುನ ಹೇಳಿದರು.

ಇಲ್ಲಿಯ ಶಾಹೀನ್ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ಶಾಹೀನ್ ಶಿಕ್ಷಣ ಸಮೂಹಗಳ ಸಂಸ್ಥೆಯ ಆಶ್ರಯದಲ್ಲಿ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ‘ಮಾಲಿನ್ಯ ಅಳಿಸಿ, ಜೀವ ಉಳಿಸಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕರು ಮಾಲಿನ್ಯ ನಿಯಂತ್ರಣ ಮಾಡಿ ಮನೆಗೊಂದು ಮರ ನೆಡಲು ಹಾಗೂ ಊರಿಗೊಂದು ವನ ನಿರ್ಮಿಸಲು ಮುಂದಾಗಬೇಕು’ ಎಂದು ತಿಳಿಸಿದರು.

ADVERTISEMENT

ಮುಖ್ಯ ಅತಿಥಿಯಾಗಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ ಮಾತನಾಡಿ, ‘ಪ್ರತಿಯೊಬ್ಬರು ವಾಹನಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ವಾಹನಗಳ ಸಂಖ್ಯೆ ಹೆಚ್ಚಿದಂತೆ ವಾಹನಗಳು ಹೊರ ಸೂಸುವ ಹೊಗೆಯ ಪ್ರಮಾಣವೂ ಅಧಿಕವಾಗುತ್ತದೆ. ಆದ್ದರಿಂದ ಅಗತ್ಯವಿದ್ದರೆ ಮಾತ್ರ ವಾಹನಗಳನ್ನು ಬಳಸುವ ಪರಿಪಾಠ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

ಪ್ರಾದೇಶಿಕ ಸಾರಿಗೆ ಇಲಾಖೆಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹ್ಮದ್ ಜಾಫರ್ ಸಾದೀಕ್ ಮಾತನಾಡಿ, ‘ಪಾಲಕರು ತಮ್ಮ ಮಕ್ಕಳಿಗೆ ಬೈಕ್‌ಗಳ ಬದಲಾಗಿ ಸೈಕಲ್‌ಗಳನ್ನು ಕೊಡಿಸಬೇಕು. ಇದರಿಂದ ಮಕ್ಕಳ ಆರೋಗ್ಯ ಇನ್ನಷ್ಟು ಸದೃಢಗೊಳ್ಳುತ್ತದೆ. ಬೈಕ್‌ಗಳಿಂದ ಹೊರ ಸೂಸುವ ಹೊಗೆ ಕಡಿಮೆಯಾಗಿ ಮಾಲಿನ್ಯ ನಿಯಂತ್ರಣಕ್ಕೆ ಸಹಕರಿಸಿದಂತಾಗುತ್ತದೆ’ ಎಂದರು,

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಸಚಿನ್ ಮಮದಾಪುರ ಮಾತನಾಡಿ, ‘ವಾಯು ಮಾಲಿನ್ಯ ತಡೆಗಟ್ಟುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಪರಿಸರ ನೈರ್ಮಲ್ಯಕ್ಕೆ ಪ್ರಾಮುಖ್ಯ ನೀಡಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೆ ಪರಿಸರ ಮಾಲಿನ್ಯ ತಡೆಗೆ ಕಂಕಣಬದ್ಧರಾಗುವಂತೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಭಾಗ್ಯವಂತಿ ಮೋಟಾರ್ ಡ್ರೈವಿಂಗ್ ಸ್ಕೂಲ್‌ ಪ್ರಾಚಾರ್ಯ ಶಿವರಾಜ್ ಜಮಾದಾರ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.