ಬಸವಕಲ್ಯಾಣ (ಬೀದರ್ ಜಿಲ್ಲೆ): ತಾಲ್ಲೂಕಿನ ಶಿರಗೂರದಲ್ಲಿ ಸೋಮವಾರ ರಾತ್ರಿ ದೇವಿ ಮೆರವಣಿಗೆ ವೇಳೆ ನಡೆದ ಗಲಾಟೆಯಲ್ಲಿ ನಿವೃತ್ತ ಯೋಧ ಬಟಗೇರಾವಾಡಿ ಗ್ರಾಮದ ಬಸವರಾಜ (36) ಅವರನ್ನು ಕೆಲವರುಕಲ್ಲುಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.
ಈ ಸಂಬಂಧ 11 ಜನರನ್ನು ಪೊಲೀಸರು ಬಂಧಿಸಿದ್ದಾರೆ.
‘ಶಿರಗೂರ ಗ್ರಾಮದಲ್ಲಿ ದಸರಾ ಸಮಾರೋಪ ಅಂಗವಾಗಿ ದೇವಿ ಮೆರವಣಿಗೆ ನಡೆಯುತ್ತಿತ್ತು. ಆಗ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಜಗಳ ಆರಂಭವಾಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ಬಸವರಾಜ ಬೆಂಬಲಿಗರ ಗುಂಪು ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆಸಿದೆ. ಇದರಿಂದಾಗಿ ರೊಚ್ಚಿಗೆದ್ದ ಗ್ರಾಮದ ಕೆಲವರು ಆವರನ್ನು ಕಲ್ಲುಗಳಿಂದ ಹೊಡೆದಿದ್ದಾರೆ. ತಲೆ ಹಾಗೂ ಮೈಗೆ ಬಲವಾದ ಗಾಯಗಳಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಜಗಳದಲ್ಲಿ ಎರಡೂ ಗುಂಪಿನ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತ ಬಸವರಾಜ ಅವರು ಗಡಿ ಭದ್ರತಾ ಪಡೆಯಲ್ಲಿ 10 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಣ್ಣಪುಟ್ಟ ಜಗಳಗಳಲ್ಲಿ ಭಾಗಿಯಾಗಿದ್ದ ಅವರ ಮೇಲೆ ಕೆಲ ಪ್ರಕರಣಗಳು ದಾಖಲಾಗಿದ್ದವು’ ಎಂದು ಪೊಲೀಸರು ಹೇಳಿದ್ದಾರೆ.
ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮಂಠಾಳ ವೃತ್ತದ ಇನ್ಸ್ಪೆಕ್ಟರ್ಮಲ್ಲಿಕಾರ್ಜುನ ಡಪ್ಪಿನ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.