ಬೀದರ್: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಬರೆದಿದ್ದಾರೆ ಎನ್ನಲಾದ ನಕಲಿ ಡೈರಿಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಅಮರನಾಥ ಪಾಟೀಲ ಒತ್ತಾಯಿಸಿದರು.
‘ಆರೋಪದಲ್ಲಿ ಸತ್ಯಾಂಶ ಇದ್ದರೆ 10 ಪ್ರಶ್ನೆಗಳಿಗೆ ಉತ್ತರಿಸುವಂತೆ ಪಕ್ಷದ ಪ್ರಮುಖರು ಸವಾಲು ಹಾಕಿದ್ದಾರೆ. ರಣಜಿತ್ ಸೂರಜಿವಾಲಾ ಯಾವುದೇ ತಳಹದಿ ಇಲ್ಲದೆ ಆರೋಪ ಮಾಡಿದ್ದಾರೆ’ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪ ಮಾಡಿದರು.
‘2013ರಲ್ಲೇ ಡೈರಿ ದೊರೆತರೂ ಮೌನವಾಗಿದ್ದವರು ಚುನಾವಣೆ ಗಮನದಲ್ಲಿಟ್ಟುಕೊಂಡು ಮತದಾರರ ದಾರಿ ತಪ್ಪಿಸಲು ಡೈರಿ ಬಿಡುಗಡೆ ಮಾಡಿದ್ದಾರೆ.ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕುಮ್ಮಕ್ಕು ನೀಡಿದ್ದಾರೆ’ ಎಂದು ಆರೋಪಿಸಿದರು.
‘ಹೈದರಾಬಾದ್ ಕರ್ನಾಟಕದ ಜಿಲ್ಲೆಗಳು ಅಭಿವೃದ್ಧಿಯಿಂದ ಹಿಂದೆ ಉಳಿದಿವೆ. ಇದಕ್ಕೆ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರವೇ ಕಾರಣ. ಎಚ್ಕೆಆರ್ಡಿಬಿಯಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ಶಾಸಕರು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಟ್ಟರೂ ಅದನ್ನು ಮಂಜೂರು ಮಾಡುತ್ತಿಲ್ಲ. ಏಳು ವರ್ಷಗಳ ಅವಧಿಯಲ್ಲಿ ₹ 2830 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ ₹ 2500 ಮಾತ್ರ ಖರ್ಚಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.