ADVERTISEMENT

ರೈತರಿಗೆ ತಕ್ಷಣವೇ ಪರಿಹಾರ ದೊರಕಿಸಿ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 6:15 IST
Last Updated 15 ಡಿಸೆಂಬರ್ 2025, 6:15 IST
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿದರು
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿದರು   

ಬೀದರ್‌: ‘ಜಿಲ್ಲೆಯ ಕೆಲವು ರೈತರಿಗೆ ಅತಿವೃಷ್ಟಿ ಪರಿಹಾರದ ಹಣ ಜಮೆ ಆಗಿಲ್ಲ ಎಂದು ದೂರುಗಳು ಬಂದಿವೆ. ಸಮಸ್ಯೆ ಏನೆಂಬುದು ತಿಳಿದು ತಕ್ಷಣವೇ ಪರಿಹರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಸಂಜೆ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಅತಿವೃಷ್ಟಿಯಿಂದ ಹಾನಿಯಾದ ಬೆಳೆಗೆ ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್ ಮತ್ತು ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗಿದೆ. ಕೆಲವರಿಗೆ ಪರಿಹಾರದ ಹಣ ಜಮಾ ಆಗಿಲ್ಲ ಎಂದು ದೂರುಗಳು ಬಂದಿವೆ. ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತೊಗರಿ ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕ್ಲಿಯರೆನ್ಸ್ ಸಿಕ್ಕಿದೆ. ರೈತರಿಗೆ ಅನುಕೂಲ ಆಗುವಂತೆ ತೊಗರಿ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ನಿರ್ದೇಶನ ನೀಡಿದರು. ‌

ADVERTISEMENT

ಕಾಲಮಿತಿಯೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಮಠ–ಮಾನ್ಯಗಳಿಗೆ ನೀಡಿರುವ ಅನುದಾನಗಳ ಕಾಮಗಾರಿಗಳ ಗತಿ ಹೆಚ್ಚಿಸಿ, ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಸಮಯ ವ್ಯರ್ಥಕ್ಕೆ ಅವಕಾಶ ಕಲ್ಪಿಸಬಾರದು ಎಂದು ಸೂಚನೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ 2023-24ರಲ್ಲಿ ₹6 ಕೋಟಿಯಲ್ಲಿ 13 ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಕಂತಿನಲ್ಲಿ ₹3 ಕೋಟಿ ಪಾವತಿಯಾಗಿದೆ. ಚೇಂಜ್ ಆಫ್ ಪ್ಲೇಸ್ ಮತ್ತು ಚೇಂಜ್ ಆಫ್ ವರ್ಕ್ ಬಗ್ಗೆ ಪ್ರಸ್ತಾವ ಕಳಿಸಬೇಕು. ಎಲ್ಲಾ ಕಾಮಗಾರಿಗಳು ಫೆಬ್ರುವರಿ ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆಗೆ ಶ್ರಮಿಸಬೇಕು. ಎಸ್‌ಎಸ್‌ಎಲ್‌ಸಿ, ಪಿಯು ಫಲಿತಾಂಶ ಪ್ರಮಾಣ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ದುಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ವಿದ್ಯುತ್ ಕಂಬಗಳ ಸಮಸ್ಯೆಗಳನ್ನು ಸರಿಪಡಿಸಬೇಕು. ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗದಂತೆ ಕ್ರಮ ವಹಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀ‍ಪ್‌ ಗುಂಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.