ADVERTISEMENT

ಕೋವಿಡ್ ಸುರಕ್ಷತಾ ಕ್ರಮ ಅನುಸರಿಸಿ: ಪ್ರಭು ಚವಾಣ್

ಜಿಲ್ಲೆಯಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 15:21 IST
Last Updated 13 ಜುಲೈ 2021, 15:21 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್‌: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಜುಲೈ 19 ಹಾಗೂ 22ರಂದು ನಡೆಸಲಿರುವ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಕೋವಿಡ್ ಭಯದಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗುವ ಸಾಧ್ಯತೆಗಳಿರುತ್ತವೆ. ಸುರಕ್ಷತಾ ಕ್ರಮಗಳ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸಿ ಪರೀಕ್ಷೆಗೆ ನೋಂದಣಿಯಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಹೆಲ್ಪ್ ಡೆಸ್ಕ್‌ ಸ್ಥಾಪಿಸಬೇಕು. ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಪರೀಕ್ಷೆ ಆರಂಭದಿಂದ ಅಂತ್ಯದವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ಗುಂಪು ಗೂಡುವಿಕೆಯನ್ನು ತಡೆಗಟ್ಟಬೇಕು. ಮಾರ್ಗಸೂಚಿಗಳ ಅನ್ವಯ ಆಸನಗಳನ್ನು ಜೋಡಿಸಬೇಕು. ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಪರೀಕ್ಷಾ ಕೊಠಡಿಗಳು ಹಾಗೂ ಮತ್ತಿತರೆ ಉಪಕರಣಗಳನ್ನು ಸ್ಯಾನಿಸೈಟ್ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

ADVERTISEMENT

ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಮೇಲೆ ಹೆಚ್ಚಿನ ಜವಾಬ್ದಾರಿಗಳಿದ್ದು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅಲ್ಪಉಪಾಹಾರ: ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಸಚಿವರು ತಮ್ಮ ಕಡೆಯಿಂದ ಅಲ್ಪ ಉಪಾಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕಳೆದ ವರ್ಷ ಕೂಡ ಅಲ್ಪಾಹಾರ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿತ್ತು. ಈ ವರ್ಷವೂ ಮಾಡಲಾಗಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.