ADVERTISEMENT

ಬೀದರ್: ಸರ್ಕಾರದ ನೆರವು ಪಡೆಯಿರಿ: ಮಡಿವಾಳರು, ಕ್ಷೌರಿಕರಿಗೆ ಜಿಲ್ಲಾಧಿಕಾರಿ ಸಲಹೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 15:57 IST
Last Updated 26 ಜೂನ್ 2020, 15:57 IST
ಬೀದರ್‌ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು
ಬೀದರ್‌ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು   

ಬೀದರ್‌: ’ಕೋವಿಡ್ 19 ಸೋಂಕಿನ ನಿಯಂತ್ರಣಕ್ಕೆ ಘೋಷಿಸಿದ ಲಾಕ್‌ಡೌನ್ ಕಾರಣ ಆರ್ಥಿಕ ಸಂಕಷ್ಟಕ್ಕೊಳಗಾದ ಮಡಿವಾಳ ಮತ್ತು ಕ್ಷೌರ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ₹ 5,000 ನೆರವು ಘೋಷಿಸಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹೇಳಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ’ಫಲಾನುಭವಿಯು ಕಡ್ಡಾಯ ಕ್ಷೌರಿಕ ಮತ್ತು ಮಡಿವಾಳ ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕುಟುಂಬಗಳಿಗೆ ಇದು ಅನ್ವಯಿಸಲಿದೆ. 18 ರಿಂದ 65 ವರ್ಷಗಳಿಗೆ ಸೀಮಿತವಾಗಿದೆ. ಎಲ್ಲ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸಬೇಕು ಎನ್ನುವುದನ್ನು ಸರಿಯಾಗಿ ತಿಳಿಸಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

‘ರಾಜ್ಯದ ಬಿಪಿಎಲ್ ಕಾರ್ಡ್‌ ಹೊಂದಿದ್ದಲ್ಲಿ ಮಾತ್ರ ರಾಜ್ಯದಲ್ಲಿ ಮಡಿವಾಳ, ಕ್ಷೌರ ವೃತ್ತಿ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರು ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಸ್ವಯಂ ಘೋಷಣೆ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಹಿ ಮಾಡಿ ಅಪ್‌ಲೋಡ್ ಮಾಡಬೇಕು. ಮಡಿವಾಳ ಹಾಗೂ ಕ್ಷೌರ ವೃತ್ತಿಯಲ್ಲಿ ತೊಡಗಿರುವ ಕುರಿತು ನಿಗದಿತ ನಮೂನೆಯಲ್ಲಿ ಉದ್ಯೋಗ ದೃಢೀಕರಣ ಪತ್ರವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಪಡೆದಿರಬೇಕು. ಮಹಿಳಾ ಫಲಾನುಭವಿಗಳು ಕ್ಷೌರ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಲ್ಲಿ ಮಾತ್ರ ಪರಿಹಾರಕ್ಕೆ ಅರ್ಹರಾಗಿರುತ್ತಾರೆ. ಬ್ಯೂಟಿಷಿಯನ್ ಅಥವಾ ಇತರ ಕೆಲಸಗಳನ್ನು ನಿರ್ವಹಿಸುತ್ತಿದ್ದಲ್ಲಿ ಪರಿಹಾರ ಪಡೆಯಲು ಅರ್ಹರಿರುವುದಿಲ್ಲ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಎಸ್ ಮಾತನಾಡಿ, ‘ಫಲಾನುಭವಿಗಳು ಸಂಬಂಧಪಟ್ಟ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಕಂದಾಯ ಅಧಿಕಾರಿ, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಂದ ಉದ್ಯೋಗ ದೃಢೀಕರಣ ಪ್ರಮಾಣ ಪತ್ರ ಪಡೆಯಬೇಕು’ ಎಂದು ಹೇಳಿದರು.

‘ಆಧಾರ್‌ ಕಾರ್ಡ್, ಬಿಪಿಎಲ್ ಕಾರಡ್‌, ಉದ್ಯೋಗ ದೃಢೀಕರಣ ಪತ್ರ, ಜನ್ಮ ದಿನಾಂಕ ದಾಖಲೆ, ಪಾಸ್‌ಪೋರ್ಟ್‌ ಅಳತೆಯ ಇತ್ತೀಚಿನ ಭಾವಚಿತ್ರ ಹೊಂದಿರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯವನ್ನು ಆಧಾರ್‌ ಲಿಂಕ್ ಹೊಂದಿರುವ ಅವರವರ ಬ್ಯಾಂಕ್ ನೇರವಾಗಿ ವರ್ಗಾಯಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 30ರವರೆಗೆ ಅವಕಾಶ ಇದೆ’ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ನಗರಾಭಿವೃದ್ಧಿ ಕೋಶದ ಶರಣಬಸಪ್ಪ ಕೋಟಪ್ಪಗೋಳ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಜಯಕುಮಾರ, ಸವಿತಾ ಸಮಾಜದ ಉಮೇಶಕುಮಾರ ಗೋಂದೆಗಾಂವ, ಮಡಿವಾಳ ಸಮಾಜದ ಧನರಾಜ್ ಮಡಿವಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.