ADVERTISEMENT

ಮಾದಿಗರಿಗೆ ಪ್ರಾತಿನಿಧ್ಯಕ್ಕೆ ಘೋಡೆ ಮನವಿ

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಕಾಂಗ್ರೆಸ್ ಟಿಕೆಟ್

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 15:23 IST
Last Updated 8 ಆಗಸ್ಟ್ 2021, 15:23 IST
ರೋಹಿದಾಸ ಘೋಡೆ
ರೋಹಿದಾಸ ಘೋಡೆ   

ಬೀದರ್: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಯ ಒಟ್ಟು ಸ್ಥಾನಗಳಲ್ಲಿ ಶೇ 50 ರಷ್ಟು ಸ್ಥಾನಗಳ ಕಾಂಗ್ರೆಸ್ ಟಿಕೆಟ್ ಮಾದಿಗ ಸಮುದಾಯಕ್ಕೆ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯದರ್ಶಿ ರೋಹಿದಾಸ ಘೋಡೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿಯ 41 ಹಾಗೂ ತಾಲ್ಲೂಕು ಪಂಚಾಯಿತಿಯ 112 ಸ್ಥಾನಗಳು ಇವೆ. ಆರು ಮಹಿಳೆ ಹಾಗೂ ಐದು ಪುರುಷ ಸೇರಿ ಜಿಲ್ಲಾ ಪಂಚಾಯಿತಿಯ 11 ಹಾಗೂ ತಾಲ್ಲೂಕು ಪಂಚಾಯಿತಿಯ 28 ಸ್ಥಾನಗಳು ಪರಿಶಿಷ್ಟ ಜಾತಿಗೆ ಮೀಸಲಾಗಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ನ ರಾಜ್ಯ ಹಾಗೂ ಜಿಲ್ಲೆಯ ಮುಖಂಡರು ಸಾಮಾಜಿಕ ನ್ಯಾಯದ ಆಧಾರದಲ್ಲಿ ಜಿಲ್ಲಾ ಪಂಚಾಯಿತಿಯ 5 ಹಾಗೂ ತಾಲ್ಲೂಕು ಪಂಚಾಯಿತಿಯ 14 ಸ್ಥಾನಗಳ ಟಿಕೆಟ್ ಪಕ್ಷಕ್ಕಾಗಿ ದುಡಿದ ಸಮುದಾಯದ ಮುಖಂಡರಿಗೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ಮಾದಿಗ ಸಮುದಾಯದ ಸುಮಾರು ಶೇ 12 ರಷ್ಟು ಜನ ಇದ್ದಾರೆ. ಸಮುದಾಯ ಸ್ವಾತಂತ್ರ್ಯ ನಂತರ ಈವರೆಗೂ ಕಾಂಗ್ರೆಸ್‍ನೊಂದಿಗೆ ಇದೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತ ಬಂದಿದೆ ಎಂದು ಹೇಳಿದ್ದಾರೆ.

ಮಾದಿಗ ಸಮುದಾಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಸಮುದಾಯದ ಅಭಿವೃದ್ಧಿಗೆ ರಾಜಕೀಯ ಅಧಿಕಾರ ಅಗತ್ಯವಾಗಿದೆ ಎಂದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.