ಬೀದರ್: ಬೀದರ್ ನಗರದಲ್ಲಿ ಕೊಳವೆಬಾವಿ ಕೊರೆಸಲು ಅನುಮತಿ ಕೊಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಆಗ್ರಹಿಸಿದ್ದಾರೆ.
ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಿಗೆ ಅವರು ಪತ್ರ ಬರೆದಿದ್ದಾರೆ.
ಮೂರು ವರ್ಷಗಳ ಹಿಂದೆ ಅನಾವೃಷ್ಟಿಯಿಂದಾಗಿ ಅಂತರ್ಜಲ ಮಟ್ಟ ಆಳಕ್ಕೆ ಹೋದಾಗ ಜಿಲ್ಲಾಡಳಿತ ಕೊಳವೆಬಾವಿ ಕೊರೆಸಲು ನಿರ್ಬಂಧ ಹೇರಿತ್ತು. ಈ ವರ್ಷ ಹೊರತುಪಡಿಸಿ ಕಳೆದ ಎರಡು ವರ್ಷ ಉತ್ತಮ ಮಳೆಯಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಿದೆ. ಆದರೂ ಕೊಳವೆಬಾವಿ ಕೊರೆಸಲು ಅನುಮತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಳವೆಬಾವಿ ಕೊರೆಸುವುದನ್ನು ನಿರ್ಬಂಧಿಸಿರುವ ಕಾರಣ ನಗರದಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಗುತ್ತಿಗೆದಾರರು ಹಾಗೂ ಕಾರ್ಮಿಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನಗರದಲ್ಲಿ ಅಂತರ್ಜಲ ಮಟ್ಟ ನಿರ್ಧರಿಸುವ ಯಾವುದೇ ತಜ್ಞ ಅಧಿಕಾರಿಗಳು ಇಲ್ಲ. ಕೂಡಲೇ ಅಂತರ್ಜಲ ತಜ್ಞರನ್ನು ಕರೆಸಿ ನಿರ್ಣಯ ಕೈಗೊಳ್ಳಬೇಕು. ಕೊಳವೆಬಾವಿ ನಿರ್ಬಂಧಕ್ಕೆ ವೈಜ್ಞಾನಿಕ ಕಾರಣಗಳಿದ್ದರೆ ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.