ADVERTISEMENT

ಶಾಸಕ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಜಾಗೀರದಾರ್ ಖಂಡನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 15:03 IST
Last Updated 23 ಸೆಪ್ಟೆಂಬರ್ 2021, 15:03 IST
ಸಂಜಯ್ ಜಾಗೀರದಾರ್
ಸಂಜಯ್ ಜಾಗೀರದಾರ್   

ಬೀದರ್: ರಾಜ್ಯದ ಕ್ರೈಸ್ತ ಮಿಷನರಿಗಳು ಮತಾಂತರ ಮಾಡುತ್ತಿವೆ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು ವಿಧಾನಸಭೆಯಲ್ಲಿ ಆರೋಪಿಸಿರುವುದನ್ನು ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಸಂಜಯ್ ಜಾಗೀರದಾರ್ ತೀವ್ರವಾಗಿ ಖಂಡಿಸಿದ್ದಾರೆ.

ಶಾಸಕ ಸ್ಥಾನದಲ್ಲಿ ಇರುವವರು ಜವಾಬ್ದಾರಿಯಿಂದ ಮಾತನಾಡಬೇಕು. ಸುಳ್ಳು ಹೇಳಿಕೆ ಕೊಟ್ಟು ಧಾರ್ಮಿಕ ಭಾವನೆ ಕೆರಳಿಸುವ ಕೆಲಸ ಮಾಡಬಾರದು. ಅವರ ತಾಯಿಯನ್ನು ಯಾರೂ ಬಲವಂತದಿಂದ ಮತಾಂತರ ಮಾಡಿಲ್ಲ ಎಂದು ಹೇಳಿದ್ದಾರೆ.

ಕ್ರೈಸ್ತ ಧರ್ಮ ಗುರುಗಳ ಮೇಲೆ ಮತಾಂತರದ ಸುಳ್ಳು ಆರೋಪ ಹೊರೆಸಲಾಗುತ್ತಿದೆ. ಯಾವುದೇ ರೀತಿಯ ಆಮಿಷ ಒಡ್ಡಿ ಮತಾಂತರ ಮಾಡಿದ ಒಂದೇ ಒಂದು ಪ್ರಕರಣ ಈವರೆಗೂ ಸಾಬೀತಾಗಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಮತಾಂತರ ಹೆಸರಲ್ಲಿ ದೇಶದಾದ್ಯಂತ ಚರ್ಚ್‍ಗಳ ಮೇಲೆ ದಾಳಿ, ಧರ್ಮಗುರುಗಳು, ಅಮಾಯಕ ಭಕ್ತರ ಮೇಲೆ ಹಲ್ಲೆ, ಆಸ್ತಿಪಾಸ್ತಿಗೆ ಹಾನಿ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ಮತಾಂತರದ ಸುಳ್ಳು ಆರೋಪ ಹೊರೆಸಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ಸಂಘಟನೆಗಳ ಸುಳ್ಳು ವರದಿ ಆಧರಿಸಿ ಭಕ್ತರ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುವ ದಿಸೆಯಲ್ಲಿ ಮತಾಂತರ ಕಾಯ್ದೆ ತಿದ್ದುಪಡಿ ಮಾಡಿ ಕ್ರೈಸ್ತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕ್ರೈಸ್ತ ಮಿಷನರಿಗಳು ದೇಶಕ್ಕೆ ನೀಡಿದ ಕೊಡುಗೆಯನ್ನು ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಗೃಹ ಸಚಿವರು ಅರಿಯಲಿ ಎಂದು ಸಲಹೆ ಮಾಡಿದ್ದಾರೆ.

ಕ್ರೈಸ್ತರು ಶಾಂತಿಪ್ರಿಯರು. ಯಾರ ಮೇಲೂ ದಾಳಿ ಮಾಡಿದ ಉದಾಹರಣೆಗಳು ಇಲ್ಲ. ಎಲ್ಲವನ್ನೂ ಸಹಿಸಿಕೊಂಡ ಸಮುದಾಯದ ಮೇಲೆ ನಿರಂತರ ದಬ್ಬಾಳಿಕೆ ಮುಂದುವರಿದರೆ ಗೂಳಿಹಟ್ಟಿ ಶೇಖರ್ ಅವರ ಕ್ಷೇತ್ರ ಸೇರಿದಂತೆ ರಾಜ್ಯದಾದ್ಯಂತ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.