
ಬೀದರ್: ಬಸವ ಸೇವಾ ಪ್ರತಿಷ್ಠಾನದ ವಾರ್ಷಿಕ ಗುರುಬಸವ ಪುರಸ್ಕಾರಕ್ಕೆ ಧಾರವಾಡದ ಹರಳಯ್ಯ ಸಮಾಜದ ಮುಖಂಡ ಡಾ. ಮಾರ್ಕಂಡೇಯ ದೊಡಮನಿ, ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ವಿಲಾಸವತಿ ಖೂಬಾ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಆಯ್ಕೆಯಾಗಿದ್ದಾರೆ.
ಫೆಬ್ರುವರಿ ಒಂದರಂದು ನಗರದಲ್ಲಿ ನಡೆಯಲಿರುವ ವಚನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ ಹಾಗೂ ಶರಣ ಸಂಸ್ಕೃತಿಯ ಪ್ರಚಾರಕ್ಕೆ ಶ್ರಮಿಸಿದಕ್ಕಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಗಂಗಾಂಬಿಕಾ ಅಕ್ಕ ತಿಳಿಸಿದ್ದಾರೆ.
ಈ ಹಿಂದೆ ಕೇಂದ್ರದ ಮಾಜಿ ಸಚಿವ ಬೂಟಾಸಿಂಗ್ (2011), ಮಾಜಿ ಮುಖ್ಯಮಂತ್ರಿ ಎನ್. ಧರಮ್ ಸಿಂಗ್ (2012), ಹೋರಾಟಗಾರ ಅಣ್ಣಾ ಹಜಾರೆ (2013), ಮೂಢನಂಬಿಕೆ ವಿರೋಧಿ ಹೋರಾಟಗಾರ ನರೇಂದ್ರ ದಾಬೋಲ್ಕರ್ (2014), ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ (2015), ಡಾ. ಮಂದಾಕಿನಿ ಡಾ. ಪ್ರಕಾಶ ಆಮ್ಟೆ ದಂಪತಿ (2016), ಚಿತ್ರನಟ ನಾನಾ ಪಾಟೇಕರ್ (2017), ವೈದ್ಯ ಡಾ. ಖಾದರ (2018), ನಿವೃತ್ತ ನ್ಯಾಯಾಧೀಶ ಎಚ್.ಎನ್. ನಾಗಮೋಹನದಾಸ್ (2019), ಇಸ್ರೋ ಅಧ್ಯಕ್ಷ ಡಾ. ಕೆ.ಶಿವನ್ (2020), ಡಾ. ಗೊ.ರು.ಚನ್ನಬಸಪ್ಪ (2025) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.