ಬೀದರ್: ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಪ್ರಯುಕ್ತ ರಾಜ್ಯ ಸರ್ಕಾರಿ ನೌಕರರು ಸೆ. 30 ರ ಒಳಗೆ
ಆನ್ಲೈನ್ನಲ್ಲಿ ಅಗತ್ಯ ಮಾಹಿತಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರವು ಯೋಜನೆ ಜಾರಿಗಾಗಿ ನೌಕರರ ಮಾಹಿತಿ ಸಂಗ್ರಹಿಸುತ್ತಿದೆ. ಕಾರಣ, ಜಿಲ್ಲೆಯ ನೌಕರರು ಶೀಘ್ರ http://bit.ly/CASHLESSHEALTH ಲಿಂಕ್ ಬಳಸಿ ತಮ್ಮ ಇಲಾಖೆ, ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಹಾಗೂ ಕುಟುಂಬದ ಒಟ್ಟು ಸದಸ್ಯರ ಸಂಖ್ಯೆಯನ್ನು ನಮೂದಿಸಬೇಕು ಎಂದು ಹೇಳಿದ್ದಾರೆ.
ಆರೋಗ್ಯ ಸಂಜೀವಿನಿಯು ರಾಜ್ಯ ಸರ್ಕಾರಿ ನೌಕರರು, ಅವರ ಪತಿ/ಪತ್ನಿ, ಮಕ್ಕಳು, ತಂದೆ- ತಾಯಿಗೆ ಉಚಿತ ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಮಾಹಿತಿ ಸಲ್ಲಿಕೆ ಕುರಿತು ನೌಕರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದ್ದಾರೆ.
ಕೆಜಿಐಡಿ ಸಂಖ್ಯೆ ಹೊಂದಿರುವ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರುವ ರಾಜ್ಯ ಸರ್ಕಾರದ ಕಾಯಂ ನೌಕರರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಈ ಯೋಜನೆ ಜಾರಿಯಲ್ಲಿ ಇರುವ ಕಾರಣ ಅವರು ಮಾಹಿತಿ ಸಲ್ಲಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.
ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುವ ರಾಜ್ಯ ಸರ್ಕಾರಿ ನೌಕರರು ಕೆಲಸದ ಜತೆಗೆ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಜಾರಿಯಾಗಲಿದ್ದು,. ನೌಕರರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.