ಅನೀಲ ಪಸರಗಿ. ಬಿಜೆಪಿ ಮಂಡಲ ಅಧ್ಯಕ್ಷ.
ಹುಮನಾಬಾದ್: ‘ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಅವರ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗೂ ಕಾಂಗ್ರೆಸ್ ನಾಯಕರು ಉದ್ದೇಶ ಪೂರ್ವಕವಾಗಿ ವಿರೋಧ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅನಿಲ ಪಸರ್ಗಿ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಕ್ಷೇತ್ರದ ಅಭಿವೃದ್ಧಿ ಬಿಟ್ಟು ಶಾಸಕರ ಕುಟುಂಬ ಅಭಿವೃದ್ಧಿ ಆಗುತ್ತಿದೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಕ್ಷೇತ್ರದ ಯಾವ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ ಹೇಳಿ?. ಹುಮನಾಬಾದ್ ವಿಧಾನ ಸಭಾ ಕ್ಷೇತ್ರದಲ್ಲಿ 15ರಿಂದ 20 ವರ್ಷಗಳ ಕಾಲ ಅಧಿಕಾರ ಕಾಂಗ್ರೆಸ್ ನವರು ಮಾಡಿದ್ದೀರಿ. ಈ ನಿಮ್ಮ 20 ವರ್ಷದ ಅಭಿವೃದ್ಧಿ ಮತ್ತು ಶಾಸಕ ಸಿದ್ದಲಿಂಗಪ್ಪ ಪಾಟೀಲ ಅವರ ಎರಡು ವರೆಗೆ ವರ್ಷದ ಅಭಿವೃದ್ಧಿ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡೋಣ ಬನ್ನಿ’ ಎಂದು ಸವಾಲು ಹಾಕಿದರು.
ಕ್ಷೇತ್ರದ ಬಹುತೇಕ ಎಲ್ಲ ಗ್ರಾಮಗಳಲ್ಲಿ ಸಿಸಿ ರಸ್ತೆ, ಹೈಮಾಸ್ಟ್, ಶಾಲಾ ಕಟ್ಟಡ, ವಸತಿ ನಿಲಯ, ಕೊಳವೆ ಬಾವಿಗಳಂತ ಅನೇಕ ಕಾಮಗಾರಿಗಳು ನಡೆಯುತ್ತಿವೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ ಹಾಗೂ ಭೀಮರಾವ್ ಪಾಟೀಲ ಅವರು ಶಾಸಕರ ಅನುದಾನ ಬರಿ ನಿರ್ಮಿತಿ ಕೇಂದ್ರಕ್ಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಸರ್ಕಾರದ ನಿಯಮಗಳ ಪ್ರಕಾರವೇ ಆಯಾಯ ಇಲಾಖೆಗಳಿಗೆ ಹಂಚಿಕೆ ಮಾಡಿದ್ದಾರೆ. ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಸಂದರ್ಭದಲ್ಲಿ ಶಾಸಕರಿಗೆ ಅವಮಾನ ಆಗಬೇಕು ಎಂಬ ಉದ್ದೇಶದಿಂದ ಗಲಾಟೆಗಳು ಸಹ ನಡೆಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಸದಸ್ಯ ರಮೇಶ ಕಲ್ಲೂರ್ ಮಾತನಾಡಿದರು.
ಗೋಷ್ಠಿಯಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಗೋಪಾಲಕೃಷ್ಣ ಮೋಹಳೆ, ಸಂತೋಷ್ ಸಂಗಮ್, ಲಖನ್ ಕೋಳಿವಾಡ, ಗಿರೀಶ್ ತುಂಬಾ, ವಿನಾಯಕ್ ಹಂದಿಕೇರಾ , ಸುನೀಲ ಪತ್ರಿ, ಜ್ಞಾನಜೇವ ಧೋಮಾಳೆ , ಕಿಶೋರ್ ಸೇರಿದಂತೆ ಇತರರು ಇದ್ದರು.
ಹುಮನಾಬಾದ್ ತಾಲ್ಲೂಕಿನಲ್ಲಿ ಗುಟ್ಕಾ ಮಟ್ಕಾ ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅನಿಲ ಪಸರ್ಗಿ ಆರೋಪಿಸಿದರು. ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಅಧಿಕಾರಿಗಳೇ ಇದಕ್ಕೆ ಸಾಥ್ ನೀಡುತ್ತಿದ್ದಾರೆ. ಸರ್ಕಾರದ ಕೈ ಗೊಂಬೆಯಾಗಿ ಅಧಿಕಾರಿಗಳು ಕೆಲಸ ಮಾಡುತ್ತಿರುವ ಕಾರಣ ತಾಲ್ಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.