ADVERTISEMENT

ಆಮ್ಲಜನಕ ಪೂರೈಕೆಯಲ್ಲಿ ಜಿಲ್ಲೆಗೆ ಅನ್ಯಾಯ: ಆರೋಪ

ಚಾಮರಾಜನಗರ ಘಟನೆ ಮರುಕಳಿಸದಂತೆ ಎಚ್ಚರ ವಹಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಮೇ 2021, 5:00 IST
Last Updated 4 ಮೇ 2021, 5:00 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಭಾಲ್ಕಿ: ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್‌ನಲ್ಲಿ ಆಮ್ಲಜನಕ ಕೊರತೆ ತೀವ್ರವಾಗುತ್ತಿದ್ದು, ನಿತ್ಯ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಜಿಲ್ಲೆಯಲ್ಲಿ ಆಮ್ಲಜನಕ ಮರುಪೂರಣ ಮಾಡುವ ಸ್ಥಾವರ ಅಥವಾ ಘಟಕವಿಲ್ಲದಿರುವುದು ಪ್ರಮುಖ ಕಾರಣವಾಗಿದೆ. ಹಾಗಾಗಿ, ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ವೈದ್ಯಕೀಯ ಆಮ್ಲಜನಕ ಪೂರೈಸಲು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಕಾರ್ಯಾ ಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ‘ಇಷ್ಟು ದಿನಗಳ ಕಾಲ ಹೈದರಾಬಾದ್‌ ನಿಂದ ಆಮ್ಲಜನಕ ಮರುಪೂರಣ ಮಾಡಿಸಿಕೊಂಡು ತರಲಾಗುತ್ತಿತ್ತು. ಆದರೆ ಈಗ ಅಂತರರಾಜ್ಯ ಆಮ್ಲಜನಕ ಸಾಗಣೆ ಸ್ಥಗಿತಗೊಳಿಸಲಾಗಿದೆ. ಈ ಮಧ್ಯೆ ಕಲಬುರ್ಗಿಗೆ ಹೋಗಿ ಆಮ್ಲಜನಕ ರೀಫಿಲ್ ಮಾಡಿಸಿಕೊಂಡು ಬರಬೇಕಾದ ಸ್ಥಿತಿ ಇದೆ. ಆದರೆ, ಕಲಬುರ್ಗಿ ಜಿಲ್ಲಾಧಿಕಾರಿ ಬೀದರ್‌ನಿಂದ ಬಂದ ಆಮ್ಲಜನಕದ ಸಿಲಿಂಡರ್ ಮರುಪೂರಣಕ್ಕೆ ತಡೆ ಹಾಕುತ್ತಿದ್ದಾರೆ. ಇದರಿಂದ ಜಿಲ್ಲೆಗೆ ಅನ್ಯಾಯ ಆಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಈ ನಿರ್ಬ೦ಧದಿಂದ ಬೀದರ್ ಜಿಲ್ಲೆಗೆ ಆಮ್ಲಜನಕ ಸಿಲಿಂಡರ್‌ಗಳು ಬಾರದೆ ಹೋದರೆ ಪರಿಸ್ಥಿತಿ ಅತ್ಯಂತ ಗಂಭೀರವಾಗುತ್ತದೆ. ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ ಪ್ರಸ್ತುತ ಜಿಲ್ಲೆಯಲ್ಲಿ ನಿತ್ಯ ಸರಾಸರಿ 50 ಜನರು ಆಮ್ಲಜನಕ ಕೊರತೆಯಿಂದ ಸಾವಿಗೀಡಾಗುತ್ತಿದ್ದಾರೆ. ಆಮ್ಲಜನಕ ಬಾರದೆ ಹೋದರೆ ಬೀದರ್ ಮೃತ್ಯುಕೂಪವಾಗಿ ಪರಿವರ್ತನೆಯಾಗುವ ಅಪಾಯವಿದೆ’ ಎಂದು ಎಚ್ಚರಿಸಿದ್ದಾರೆ.

ADVERTISEMENT

‘ಚಾಮರಾಜನಗರ ಘಟನೆಯನ್ನು ಮನಗಂಡು ತಕ್ಷಣವೇ ಜಿಲ್ಲೆಗೆ ಅವ ಶ್ಯಕತೆಗೆ ತಕ್ಕಂತೆ ಆಮ್ಲಜನಕ ಪೂರೈಸ ಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.