ADVERTISEMENT

ಪೋಷಣ ಅಭಿಯಾನದಲ್ಲಿ ಅವ್ಯವಹಾರ: ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 15:00 IST
Last Updated 21 ಜೂನ್ 2021, 15:00 IST
ರಾಜಶೇಖರ ನಾಗಮೂರ್ತಿ, ಓಂಪ್ರಕಾಶ ರೊಟ್ಟೆ
ರಾಜಶೇಖರ ನಾಗಮೂರ್ತಿ, ಓಂಪ್ರಕಾಶ ರೊಟ್ಟೆ   

ಬೀದರ್: ಜಿಲ್ಲೆಯಲ್ಲಿ ಪೋಷಣ ಅಭಿಯಾನ ಅವ್ಯವಹಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಶೇಖರ ನಾಗಮೂರ್ತಿ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಹಾಗೂ ಮಹಿಳೆಯರಲ್ಲಿ ಪೌಷ್ಟಿಕ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಪೋಷಣ ಅಭಿಯಾನ ಆರಂಭಿಸಿದೆ. ಆದರೆ, ಜಿಲ್ಲೆಯಲ್ಲಿ ಮಕ್ಕಳು ಹಾಗೂ ಮಹಿಳೆಯರಿಗೆ ಸೇರಬೇಕಾದ ಪೌಷ್ಟಿಕ ಆಹಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲ ಅಧಿಕಾರಿಗಳ ಪಾಲಾಗುತ್ತಿದೆ ಎಂದು ಆಪಾದಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ, ಸಿಬ್ಬಂದಿ ಹಾಗೂ ಇತರರ ವಿರುದ್ಧ ದಾಖಲೆ ಸಮೇತ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ಕೊಡಲಾಗಿದೆ. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ADVERTISEMENT

ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರನ್ನು ಮತ್ತೆ ಅದೇ ಸ್ಥಳದಲ್ಲಿ ಮುಂದುವರಿಸಲಾಗಿದೆ. ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತು ಮಾಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅಂಗನವಾಡಿ ಹುದ್ದೆಗಳ ನೇಮಕ, ಪೌಷ್ಟಿಕ ಆಹಾರ ಕುರಿತು ಅನೇಕರು ದೂರು ಕೊಟ್ಟಿದ್ದಾರೆ. ಆದರೆ, ಸಂಬಂಧಪಟ್ಟವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಜಿಲ್ಲಾಡಳಿತ ಭಷ್ಟ ನೌಕರರನ್ನು ಪೋಷಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.