ADVERTISEMENT

ಸಿದ್ದರಾಮಯ್ಯ ಏನು ಬಿಜೆಪಿ ಹೈಕಮಾಂಡೇ: ಜಗದೀಶ‌ ಶೆಟ್ಟರ್‌ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 7:20 IST
Last Updated 11 ಜನವರಿ 2021, 7:20 IST
ಸಚಿವ ಜಗದೀಶ ಶೆಟ್ಟರ್‌
ಸಚಿವ ಜಗದೀಶ ಶೆಟ್ಟರ್‌   

ಬೀದರ್‌: ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಹೇಳಲು ಸಿದ್ದರಾಮಯ್ಯ ಬಿಜೆಪಿಯ ಹೈಕಮಾಂಡ್ ಏನು? ಸಿದ್ದರಾಮಯ್ಯ ಅವರಿಗೆ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಬೇಕಿದ್ದರೆ ರಚನಾತ್ಮಕ ಸಲಹೆ ಸೂಚನೆಗಳನ್ನು ಕೊಡಲಿ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್‌ ಅಧೋಗತಿಗೆ ಇಳಿದಿದೆ. ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಷಯಗಳಿಲ್ಲ. ಹೀಗಾಗಿ ಏನಾದರೊಂದು ಮಾತನಾಡಲು ಶುರು ಮಾಡಿದ್ದಾರೆ. ಮೊದಲು ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ನಡುವಿನ ಸಂಬಂಧಗಳನ್ನು ಸರಿಪಡಿಸಿಕೊಳ್ಳರಿ, ನಂತರ ಬೇರೆ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡರಿಗೆ ಸಲಹೆ ನೀಡಿದರು.

ADVERTISEMENT

ಕಾಂಗ್ರೆಸ್‌ ಪಕ್ಷ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಗ್ಗೆ ಸಿದ್ದರಾಮಯ್ಯ ಅವರು ವಿಚಾರ ಮಾಡುವುದು ಒಳ್ಳೆಯದು ಎಂದರು.

ಸಚಿವ ಸಂಪುಟಕ್ಕೆ ಎಷ್ಟು ಜನ ಸೇರಿಸಿಕೊಳ್ಳಬೇಕು ಎನ್ನುವುದು ಮುಖ್ಯಮಂತ್ರಿ ಪರಮಾಧಿಕಾರಕ್ಕೆ ಬಿಟ್ಟ ವಿಚಾರ. ಸಂಪುಟಕ್ಕೆ ಎಷ್ಟು ಜನ ಸೇರಿಸಿಕೊಳ್ಳಲಿದ್ದಾರೆ ಎನ್ನುವ ಹೆಸರುಗಳನ್ನು ಅವರೇ ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಭಗವಂತ ಖೂಬಾ, ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸಂದೀಪ್, ಶೈಲೇಂದ್ರ ಬೆಲ್ದಾಳೆ, ಬಾಬು ವಾಲಿ, ಈಶ್ವರಸಿಂಗ್‌ ಠಾಕೂರ್, ಶಿವಾನಂದ ಮಂಠಾಳಕರ್‌, ಡಿ.ಕೆ.ಸಿದ್ರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.