ADVERTISEMENT

ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಬಸವರಾಜ ಧನ್ನೂರ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 10:34 IST
Last Updated 21 ಆಗಸ್ಟ್ 2019, 10:34 IST
ಬೀದರ್‌ನ ಗಾಂಧಿಗಂಜ್ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಧನ್ನೂರ ಅವರನ್ನು ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಸನ್ಮಾನಿಸಿದರು. ಆನಂದ ದೇವಪ್ಪ, ಬಾಬುವಾಲಿ, ಸೋಮಶೇಖರ ಪಾಟೀಲ ಗಾದಗಿ ಇದ್ದರು
ಬೀದರ್‌ನ ಗಾಂಧಿಗಂಜ್ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಧನ್ನೂರ ಅವರನ್ನು ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಸನ್ಮಾನಿಸಿದರು. ಆನಂದ ದೇವಪ್ಪ, ಬಾಬುವಾಲಿ, ಸೋಮಶೇಖರ ಪಾಟೀಲ ಗಾದಗಿ ಇದ್ದರು   

ಬೀದರ್: ಜಾಗತಿಕ ಲಿಂಗಾಯತ ಮಹಾಸಭಾದ ಬೀದರ್‌ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಸವರಾಜ ಧನ್ನೂರ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಾಸಭಾ ಜಿಲ್ಲಾ ಸಂಯೋಜಕ ಸಮಿತಿಯ ಅಧ್ಯಕ್ಷ ಗುರುಬಸವ ಪಟ್ಟದ್ದೇವರ ಅಧ್ಯಕ್ಷತೆಯಲ್ಲಿ ಇಲ್ಲಿಯ ಗಾಂಧಿಗಂಜ್‌ನ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಮಹಾಸಭಾ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ನಡೆಯಿತು.

‘ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯತ್ವದಲ್ಲಿ ಬೀದರ್ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚು ಜನರ ಸದಸ್ಯತ್ವ ಮಾಡಿಸಲಾಗುವುದು. ಹಳ್ಳಿ ಹಳ್ಳಿಗಳಲ್ಲೂ ಸದಸ್ಯತ್ವ ಅಭಿಯಾನ ನಡೆಸಲಾಗುವುದು’ ಎಂದು ಬಸವರಾಜ ಧನ್ನೂರ ತಿಳಿಸಿದರು.

ADVERTISEMENT

‘ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಹಾಗೂ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಸಂಘಟಿತ ಹೋರಾಟ ನಡೆಸಬೇಕಾಗಿದೆ. ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತರ ಮಾನ್ಯತೆಯಿಂದ ಮುಂದಿನ ಪೀಳಿಗೆಗೆ ಅನುಕೂಲ ಆಗಲಿದೆ’ ಎಂದು ತಿಳಿಸಿದರು.

‘ಸರ್ಕಾರ, ಬಸವಕಲ್ಯಾಣದ ಅನುಭವ ಮಂಟಪ ಹಾಗೂ ಶರಣರ ಸ್ಮಾರಕಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಜಾಗತಿಕ ಲಿಂಗಾಯತ ಮಹಾಸಭಾ ಮೂಲಕ ವಿಶ್ವದಲ್ಲಿರುವ ಲಿಂಗಾಯತರನ್ನು ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಬರುವ ದಿನಗಳಲ್ಲಿ ಬಸವ ಧರ್ಮ ವಿಶ್ವಧರ್ಮ ಆಗುವುದರಲ್ಲಿ ಯಾವುದೇ ಸಂದೇಹ ಇಲ್ಲ’ ಎಂದು ಗುರುಬಸವ ಪಟ್ಟದ್ದೇವರು ತಿಳಿಸಿದರು.

ಮಹಾಸಭಾದ ಸಂಯೋಜಕರಾದ ಕಾಶಪ್ಪ ಧನ್ನೂರ, ಆನಂದ ದೇವಪ್ಪ, ಬಸವರಾಜ ಬುಳ್ಳಾ, ಬಾಬುವಾಲಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿದರು.

ಮುಖಂಡರಾದ ಸೋಮಶೇಖರ ಪಾಟೀಲ ಗಾದಗಿ, ಬಸವರಾಜ ಪಾಟೀಲ ಹಾರೂರಗೇರಿ, ಸುರೇಶ ಸ್ವಾಮಿ, ಸಿ.ಎಸ್. ಪಾಟೀಲ, ಕಂಟೆಪ್ಪ ದಾನಾ, ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಹುಗ್ಗಿ ಇದ್ದರು.

ಬಸವರಾಜ ಭತಮುರ್ಗೆ ಸ್ವಾಗತಿಸಿದರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ರಾಜೇಂದ್ರ ಜೊನ್ನಿಕೇರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.