ಬೀದರ್: ಜ. 11 ಮತ್ತು 12 ರಂದು ನಗರದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ರೀಡಾಕೂಟದ ದಿನಾಂಕ ಅಂತಿಮಗೊಳಿಸಲಾಗಿದೆ. ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾ ಸ್ಪರ್ಧೆ ಹಾಗೂ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಸಾಂಸ್ಕೃತಿಕ ಪರ್ಧೆಗಳನ್ನು ನಡೆಸಲು
ನಿರ್ಣಯಿಸಲಾಗಿದೆ ಎಂದು ಹೇಳಿದ್ದಾರೆ.
ಸಾಂಸ್ಕೃತಿಕ ಸ್ಪರ್ಧೆಗೆ ರಂಗ ಮಂದಿರ ಕಾಯ್ದಿರಿಸುವಿಕೆ, ದೈಹಿಕ ಶಿಕ್ಷಣ ಶಿಕ್ಷಕರ ನಿಯೋಜನೆ, ಕ್ರೀಡಾಂಗಣ ಸ್ವಚ್ಛತೆ, ಕುಡಿಯುವ ನೀರು, ಆಂಬುಲನ್ಸ್, ಪೊಲೀಸ್ ವ್ಯವಸ್ಥೆಗೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು, ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.
11 ರಂದು ಸಂಜೆ 6ಕ್ಕೆ ರಂಗ ಮಂದಿರದಲ್ಲಿ ರಾಜ್ಯ ಹಾಗೂ ಜಿಲ್ಲಾಮಟ್ಟದ ಖ್ಯಾತ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಕ್ರೀಡಾಕೂಟದ ಪ್ರಯುಕ್ತ ನೌಕರರಿಗೆ ಎರಡು ದಿನ ಒಒಡಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಕ್ರೀಡಾಕೂಟದಲ್ಲಿ ವಿಜೇತರಿಗೆ ಪಾರಿತೋಷಕ ಹಾಗೂ ಪ್ರಮಾಣ ಪತ್ರ ಕೊಡಲಾಗುವುದು. ಎರಡು ದಿನ ಬೆಳಿಗ್ಗೆ ಉಪಾಹಾರ ಚಹಾ, ಮಧ್ಯಾಹ್ನ ಹಾಗೂ ಸಂಜೆ ಊಟದ ವ್ಯವಸ್ಥೆ ಇರಲಿದೆ ಎಂದು ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹೆಸರು ನೋಂದಣಿಗೆ ಜ. 5 ಕೊನೆಯ ದಿನವಾಗಿದೆ. ನೌಕರರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.