ಬೀದರ್: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕುಮಾರ ಕರಂಜಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪತ್ರಕರ್ತರು ಸಂಘದ ಮುಂದಾಳತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ವಾರ್ತಾ ಇಲಾಖೆ ಕಚೇರಿಯಲ್ಲಿ ಮಾಧ್ಯಮ ಪಟ್ಟಿಗೆ ಸಂಬಂಧಿಸಿದ ಚರ್ಚೆ ವೇಳೆ ಸಹಾಯಕ ನಿರ್ದೇಶಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು. ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅರ್ಹ ಪತ್ರಿಕೆಗಳನ್ನು ಪ್ರಾದೇಶಿಕ ಮತ್ತು ಮಾಧ್ಯಮ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು. 2016 ರಿಂದ ನಿಯಮಬಾಹಿರವಾಗಿ ಶಿಫಾರಸು ಮಾಡಲಾದ ಪ್ರಾದೇಶಿಕ ಹಾಗೂ ಗಡಿ ಭಾಗದ ಪತ್ರಿಕೆಗಳ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಅಶೋಕಕುಮಾರ ಕರಂಜಿ ನೇತೃತ್ವ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಕಾಮಶೆಟ್ಟಿ, ಜಿಲ್ಲಾ ಘಟಕದ ಪದಾಧಿಕಾರಿಗಳಾದ ದಯಾನಂದ ಸ್ವಾಮಿ, ಗುರುರಾಜ ಕುಲಕರ್ಣಿ, ದೇವಿದಾಸ ಚಿಲ್ಲರ್ಗಿ, ದಿಲೀಪಕುಮಾರ ಮೇತ್ರೆ, ಮಲ್ಲಿಕಾರ್ಜುನ ನಾಗರಾಳ, ಬಸವರಾಜ ಪವಾರ್, ವೆಂಕಟೇಶ ಮೋರಖಂಡಿ, ಮಲ್ಲಿಕಾರ್ಜುನ ಮರಕಲೆ, ಅಪ್ಪಾರಾವ್ ಸೌದಿ, ಸೈಯದ್ ಮುಸ್ತಾಫ ಖಾದ್ರಿ, ಜೈಕುಮಾರ, ಸಂಜುಕುಮಾರ ಬುಕ್ಕಾ, ಓಂಕಾರ ಮಠಪತಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.