ಬೀದರ್: ಕೋವಿಡ್ 19 ರೋಗಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದವರ ಪತ್ತೆ ಕಾರ್ಯದಲ್ಲಿ ಕರ್ತವ್ಯ ನಿರ್ಲಕ್ಷ ತೋರಿದ ಆರೋಪದಲ್ಲಿ ಇಲ್ಲಿಯ ಬಿದ್ರಿ ಕಾಲೋನಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕ ರಾಜಶೇಖರ ಅವರನ್ನು ಅಮಾನತುಗೊಳಿಸಲಾಗಿದೆ.
ರಾಜಶೇಖರ ಅವರನ್ನು ಕೋವಿಡ್ 19 ರೋಗಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದವರ ಪತ್ತೆ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ, ಅವರು ಸಂಪರ್ಕಕ್ಕೆ ಬಂದವರ ಮನೆಗೆ ಭೇಟಿ ಕೊಟ್ಟು ವಿವರಗಳನ್ನು ಪಡೆಯದೆ, ಪ್ರಾಥಮಿಕ ಸಂಪರ್ಕಕ್ಕೆ ಬಂದ ಮಹಿಳೆಯನ್ನು ಮೊಬೈಲ್ನಲ್ಲಿ ಸಂಪರ್ಕಿಸಿ, ದ್ವಿತೀಯ ಸಂಪರ್ಕಕ್ಕೆ ಬಂದ ಯಾವುದಾದರೂ ಹೆಸರುಗಳನ್ನು ಕೊಡಲು ತಿಳಿಸಿದ್ದರು. ಕರ್ತವ್ಯ ಲೋಪ ಎಸಗಿದ ಕಾರಣ ಇಲಾಖಾ ವಿಚಾರಣೆ ಕಾಯ್ದಿರಿಸಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.