ADVERTISEMENT

ಕಲಬುರ್ಗಿ ಅಭಿವೃದ್ಧಿ ಸ್ಲೋ: ಬಿಜೆಪಿ ನಾಯಕಿ ಕೆ.ರತ್ನಪ್ರಭ ಬೇಸರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 9:22 IST
Last Updated 19 ಏಪ್ರಿಲ್ 2019, 9:22 IST
ಕೆ.ರತ್ನಪ್ರಭ
ಕೆ.ರತ್ನಪ್ರಭ   

ಬೀದರ್‌: ‘ಕಲಬುರ್ಗಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಆದರೆ ಸ್ಲೋ ಇದೆ. ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ದಿಸೆಯಲ್ಲಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಪ್ರಚಾರ ಮಾಡುತ್ತಿದ್ದೇನೆ’ ಎಂದು ನಿವೃತ್ತ ಐಎಎಸ್‌ ಅಧಿಕಾರಿ, ಬಿಜೆಪಿ ನಾಯಕಿ ಕೆ.ರತ್ನಪ್ರಭ ಹೇಳಿದರು.

‘ಜನ ಬದಲಾವಣೆ ಬಯಸುತ್ತಿದ್ದಾರೆ. ಸಂಸತ್ತಿನಲ್ಲಿ ಕ್ಷೇತ್ರದ ಜನತೆಯ ಪರವಾಗಿ ಧ್ವನಿ ಎತ್ತುವ ಜನಪ್ರತಿನಿಧಿಗಳು ಬೇಕಾಗಿದ್ದಾರೆ. ಉಮೇಶ ಜಾಧವ ಹಾಗೂ ಭಗವಂತ ಖೂಬಾ ಸಮರ್ಥವಾಗಿ ಕಾರ್ಯ ನಿರ್ವಹಿಸಲಿದ್ದಾರೆ’ ಎಂದು ನಗರದಲ್ಲಿ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

‘ಕಾಂಗ್ರೆಸ್‌ನವರು ನನಗೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲು ವಿಳಂಬ ಮಾಡಿದರು. ಮಹಿಳೆಯ ಬಗ್ಗೆ ಗೌರವ ಇದ್ದರೆ ಮೊದಲೇ ಬಡ್ತಿ ಕೊಡುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡರೂ ಪ್ರಯೋಜನ ಆಗಲಿಲ್ಲ. ಕೊನೆಯ ಹಂತದಲ್ಲಿ ಅವಕಾಶ ನೀಡಿದರೂ ಕಡಿಮೆ ಅವಧಿಯಲ್ಲಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ’ ಎಂದು ಹೇಳಿದರು.

ADVERTISEMENT

‘ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ, ದೇವೇಗೌಡರು ಎಲ್ಲರೂ ಅಧಿಕಾರ ನಡೆಸುತ್ತಿದ್ದಾರೆ. ನಿಜವಾಗಿ ಯಾರು ಅಧಿಕಾರ ನಡೆಸುತ್ತಿದ್ದಾರೆ ಎನ್ನುವ ಗೊಂದಲ ಇದೆ’ ಎಂದು ತಿಳಿಸಿದರು

‘ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ಜನರ ಸೇವೆ ಮಾಡುವ ಉದ್ದೇಶದಿಂದ ಏಪ್ರಿಲ್‌ 4 ರಂದು ಬಿಜೆಪಿ ಸೇರಿದ್ದೇನೆ. ನಾನು ಬೀದರ್ ಉಪ ವಿಭಾಗಾಧಿಕಾರಿಯಾಗಿದ್ದಾಗ ಔರಾದ್‌ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಕೊಳವೆಬಾವಿ ಕೊರೆದು ಜನರಿಗೆ ನೀರು ಕೊಟ್ಟೆ. ಇದು ನನ್ನ ಸಾಧನೆ’ ಎಂದು ಹೇಳಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಅಮರನಾಥ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.