ಬೀದರ್: ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಬೀದರ್ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಬಸವರಾಜ ಜಿ. ಪಾಟೀಲ ಹಾಗೂ ಅಧ್ಯಕ್ಷರಾಗಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದ ಕೆಆರ್ಇ ಸಂಸ್ಥೆಯ ಫಾರ್ಮಸಿ ಕಾಲೇಜು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಅಧ್ಯಕ್ಷ ಶಶೀಲ್ ನಮೋಶಿ ಪದಾಧಿಕಾರಿಗಳ ಆಯ್ಕೆಯನ್ನು ಪ್ರಕಟಿಸಿದರು.
ದೇಶದ ಅಮೃತ ಮಹೋತ್ಸವದ ವೇಳೆ 2022 ರ ಸೆಪ್ಟೆಂಬರ್ 17 ರಿಂದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಪರ್ವ ಆರಂಭವಾಗಲಿದೆ. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ನಿಮಿತ್ತ ವರ್ಷವಿಡೀ ಕಲೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಶಿಕ್ಷಣ, ಅಭಿವೃದ್ಧಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸರ್ಕಾರಕ್ಕೆ ಮನವರಿಕೆ ಮಾಡಲು ಸಭೆ ನಿರ್ಧರಿಸಿತು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ ರಾಷ್ಟ್ರಮಟ್ಟದ ನಾಯಕರು, ರಾಜ್ಯಪಾಲರು, ಮುಖ್ಯಮಂತ್ರಿ, ಸಚಿವರನ್ನು ಆಹ್ವಾನಿಸಲಾಗುವುದು. ಕಲ್ಯಾಣ ಕರ್ನಾಟಕದ ಸಚಿವರು, ಸಂಸದರು ಹಾಗೂ ಶಾಸಕರನ್ನು ಒಳಗೊಂಡ ಉತ್ಸವ ಸಮಿತಿಯ ನಿಯೋಗವು ಉತ್ಸವಕ್ಕೆ ಸಂಬಂಧಿಸಿದಂತೆ ಶೀಘ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದೆ ಎಂದು ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಅಧ್ಯಕ್ಷ ಶಶಿಲ್ ನಮೋಶಿ ತಿಳಿಸಿದರು.
ಡಾ. ಬಸವರಾಜ ಪಾಟೀಲ ಅಷ್ಟೂರ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಲಕ್ಷ್ಮಣ ದಸ್ತಿ, ಶಾಮರಾವ್ ಪೆಟ್ಟಿ, ಸಿದ್ಧಾರೆಡ್ಡಿ, ಸೋಮಶೇಖರ ಪಾಟೀಲ ಗಾದಗಿ, ಸುರೇಶ ಚನಶೆಟ್ಟಿ, ಶಶಿಧರ ಹೊಸಳ್ಳಿ, ಶಕುಂತಲಾ ಬೆಲ್ದಾಳೆ, ರಾಜೇಂದ್ರಕುಮಾರ ಗಂದಗೆ, ಹಾವಶೆಟ್ಟಿ ಪಾಟೀಲ, ಭಾರತಿ ವಸ್ತ್ರದ, ಮಡಿವಾಳಪ್ಪ ಗಂಗಶೆಟ್ಟಿ, ವಿಕ್ರಮ ಮುದಾಳೆ ಇದ್ದರು. ಶಿವಕುಮಾರ ಕಟ್ಟೆ, ಗುರುನಾಥ ರಾಜಗೀರಾ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.