ಜನವಾಡ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸಹಯೋಗದಲ್ಲಿ ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ಕೊಡಲಾಯಿತು.
ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ವೀರಶೆಟ್ಟಿ ಗೌಸಪೂರೆ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಅರ್ಹರ ಮನವೊಲಿಸಿ, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಕೋವಿಡ್ ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್ ಕೊಡಿಸಿದರು.
ಸಾರ್ವಜನಿಕರಿಗೆ ಕೋವಿಡ್ ಸೋಂಕು ಹರಡುವಿಕೆ ಹಾಗೂ ಲಸಿಕಾಕರಣ ಮಹತ್ವ ಕುರಿತು ತಿಳಿವಳಿಕೆ ನೀಡಿದರು.
ಕೋವಿಡ್ ಸೋಂಕನ್ನು ನಿಯಂತ್ರಿಸಲು 18 ವರ್ಷ ಮೇಲ್ಪಟ್ಟವರು ತಪ್ಪದೆ ಲಸಿಕೆ ತೆಗೆದುಕೊಳ್ಳಬೇಕು. ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಕಾರಣ, ಲಸಿಕೆ ಕುರಿತ ಸುಳ್ಳು ವದಂತಿಗಳನ್ನು ನಂಬಬಾರದು ಎಂದು ವೀರಶೆಟ್ಟಿ ಗೌಸಪೂರೆ ಹೇಳಿದರು.
ಬೀದರ್ ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಸೋಂಕು ಬಹುತೇಕ ನಿಯಂತ್ರಣಕ್ಕೆ ಬಂದಿದೆ. ಸುರಕ್ಷತಾ ನಿಯಮ ಪಾಲನೆ, ಲಸಿಕಾಕರಣ ಸೇರಿದಂತೆ ಆಡಳಿತದೊಂದಿಗೆ ಎಲ್ಲರೂ ಕೈಜೋಡಿಸಿದರೆ ಕೋವಿಡ್ ನಿರ್ಮೂಲನೆಯಾಗುವ ದಿನಗಳು ದೂರವಿಲ್ಲ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಲಕ್ಷ್ಮಿ ಬಿರಾದಾರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಲ್ಲಾವುದ್ದಿನ್ ನಿರ್ಣಾ, ವೈದ್ಯಾಧಿಕಾರಿ ಡಾ. ನಿವೇದಿತಾ ಪಾಟೀಲ, ವೇದಿಕೆಯ ಪರಮೇಶ್ವರ ಅಣವಾರ್, ನಾಗೇಶ ಉಪ್ಪಾರ್, ಅಜಯಕುಮಾರ ಬೆಳಕೇರಿ, ಬಸವರಾಜ ಗಣಾಪುರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.