ADVERTISEMENT

ಕರ್ನಾಟಕ ಕಾಲೇಜು ಸುವರ್ಣ ಮಹೋತ್ಸವ

ಎರಡು ದಿನ ವಿಶೇಷ ಕಾರ್ಯಕ್ರಮ: ಡಾ.ಬಸವರಾಜ ಪಾಟೀಲ ಅಷ್ಟೂರ್

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 14:28 IST
Last Updated 6 ಅಕ್ಟೋಬರ್ 2021, 14:28 IST
ಡಾ.ಬಸವರಾಜ ಪಾಟೀಲ ಅಷ್ಟೂರ್
ಡಾ.ಬಸವರಾಜ ಪಾಟೀಲ ಅಷ್ಟೂರ್   

ಬೀದರ್‌: ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕರ್ನಾಟಕ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ಅ.9 ಹಾಗೂ 10 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಕರಾಶಿ ಸಂಸ್ಥೆಯ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಅಷ್ಟೂರ್ ತಿಳಿಸಿದ್ದಾರೆ.

ಅ. 9 ರಂದು ಜಹೀರಾಬಾದ್ ರಸ್ತೆಯಲ್ಲಿ ಇರುವ ಕರ್ನಾಟಕ ಕಾಲೇಜು ಹಾಗೂ 10 ರಂದು ಮನ್ನಳ್ಳಿ ರಸ್ತೆಯ ಕರ್ನಾಟಕ ಫಾರ್ಮಸಿ ಕಾಲೇಜಿನ ಆವರಣದಲ್ಲಿ ಸಮಾರಂಭ ಜರುಗಲಿವೆ.

ಶನಿವಾರ ಬೆಳಿಗ್ಗೆ 11ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸುವರ್ಣ ಮಹೋತ್ಸವ ಕಟ್ಟಡ ಉದ್ಘಾಟಿಸುವರು. ಸಿದ್ಧಾರೂಢ ಮಠದ ಶಿವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ್ ಹಾಗೂ ಕಲಬುರ್ಗಿಯ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಸಾಲಿಮಠ ಸಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ADVERTISEMENT

ಅ. 10 ರಂದು ಸಂಜೆ 5ಕ್ಕೆ ಸುವರ್ಣ ಮಹೋತ್ಸವ ಸಮಾರಂಭವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಶಾಸಕರಾದ ರಾಜಶೇಖರ ಪಾಟೀಲ, ಬಂಡೆಪ್ಪ ಕಾಶಂಪೂರ್, ರಹೀಂಖಾನ್, ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ರಘುನಾಥರಾವ್ ಮಲ್ಕಾಪುರೆ, ವಿಜಯಸಿಂಗ್, ಚಂದ್ರಶೇಖರ ಪಾಟೀಲ, ಅರವಿಂದಕುಮಾರ ಅರಳಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬಿಡಿಎ ಅಧ್ಯಕ್ಷ ಬಾಬುವಾಲಿ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ, ಚುನಾಯಿತ ಪ್ರತಿನಿಧಿಗಳು, ಗಣ್ಯರು ಭಾಗವಹಿಸುವರು. ಸುವರ್ಣ ಮಹೋತ್ಸವ ಸಂದರ್ಭದಲ್ಲಿ ನೂತನ ಕಟ್ಟಡಗಳು, ಕಂಪ್ಯೂಟರ್ ಪ್ರಯೋಗಾಲಯ, ಗ್ರಂಥಾಲಯ, ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ, ಸ್ಮರಣೆ ಸಂಚಿಕೆ ಬಿಡುಗಡೆ ಕೂಡ ನಡೆಯಲಿವೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯು ಸ್ವಾತಂತ್ರ್ಯ ಪೂರ್ವ(1942)ದಲ್ಲಿ ಸ್ಥಾಪಿತವಾಗಿ ಪ್ರಾಥಮಿಕ ಶಾಲೆಯಿಂದ ಆರಂಭವಾದ ಸಂಸ್ಥೆಯಲ್ಲಿ ಇದೀಗ ಎಲ್.ಕೆ.ಜಿ. ಯಿಂದ ಪಿ.ಜಿ. ಹಾಗೂ ಪಿಎಚ್, ಡಿ ವರೆಗೆ ಸಾಂಪ್ರದಾಯಿಕ ಹಾಗೂ ಹಲವು ವೃತ್ತಿ ಶಿಕ್ಷಣ ಕೋರ್ಸುಗಳವರೆಗೆ ಸುಮಾರು 25 ಅಂಗ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಆರಂಭವಾಗಿ 50 ವರ್ಷಗಳನ್ನು ಪೂರೈಸಿದೆ. ಇಲ್ಲಿ ಓದಿದ ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶದಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.