ಲೋಕಾಯುಕ್ತ ಪೊಲೀಸರು ಬೀದರ್ ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶೋಧ ಕಾರ್ಯ ಕೈಗೊಂಡು, ಅಲ್ಲಿನ ಸಿಬ್ಬಂದಿಯ ವಿಚಾರಣೆ ನಡೆಸಿದರು
ಬೀದರ್: ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ವಿವಿ ವ್ಯಾಪ್ತಿಯಲ್ಲಿ ರಾಜ್ಯದ ವಿವಿಧೆಡೆ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಮನೆಗಳು ಸೇರಿದಂತೆ ಒಟ್ಟು 69 ಸ್ಥಳಗಳ ಮೇಲೆ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
2017ರಿಂದ 2021ರ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ₹22 ಕೋಟಿ ಅಕ್ರಮ ನಡೆದಿದೆ ಎಂದು ವೆಂಕಟ್ ರೆಡ್ಡಿ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
2017ರಿಂದ 2021ರ ಅವಧಿಯಲ್ಲಿ ಕೆಲಸ ನಿರ್ವಹಿಸಿದ ವಿವಿ ಕುಲಪತಿಗಳು, ಕುಲಸಚಿವರು, ವಿವಿಧ ನಿಕಾಯದ ಡೀನ್ ಗಳು, ಅಧಿಕಾರಿಗಳು, ಎಂಜಿನಿಯರ್ ಗಳು ಹಾಗೂ ಸಿಬ್ಬಂದಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ಕೈಗೊಂಡಿದ್ದಾರೆ. ಕೆಲವು ಅಧಿಕಾರಿಗಳನ್ನು ವಿಚಾರಣೆಗೂ ಒಳಪಡಿಸಿದ್ದಾರೆ ಎಂದು ಖಚಿತ ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.
ಬೆಂಗಳೂರಿನ 31 ಕಡೆ, ಬೀದರ್ ಜಿಲ್ಲೆಯ 24 ಭಾಗಗಳಲ್ಲಿ, ಕೊಪ್ಪಳ, ಚಿಕ್ಕಮಗಳೂರಿನ ತಲಾ ಎರಡು ಕಡೆಗಳಲ್ಲಿ, ರಾಮನಗರ, ಹಾಸನ,ಕೋಲಾರ, ಉಡುಪಿ ಸೇರಿದಂತೆ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಷ್ ಖರ್ಬಿಕರ್ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.