ಬೀದರ್: ‘ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಸಂವಿಧಾನದ ಕಲಂ 371 (ಜೆ) ತಿದ್ದುಪಡಿಯ ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದರು ಎಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಜನತೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಕಿಡಿಕಾರಿದ್ದಾರೆ.
‘ಇಂದಿಗೂ ರಾಜ್ಯದ ಜನ, ಕಲ್ಯಾಣ ಕರ್ನಾಟಕದ ಪಿತಾಮಹ, 371 (ಜೆ) ರೂವಾರಿ ಎಂದು ದಿ.ವೈಜನಾಥ ಪಾಟೀಲ ಅವರನ್ನು ಮಾತ್ರ ಕರೆಯುತ್ತಾರೆ’ ಎಂದು ಹೇಳಿದರು.
‘ಧೃತರಾಷ್ಟ್ರನಂತೆ ಈಶ್ವರ ಖಂಡ್ರೆಯವರಿಗೆ ತನ್ನ ಪುತ್ರ ಹಾಗೂ ಪರಿವಾರದವರ ಮೇಲೆ ಅತಿ ವ್ಯಾಮೋಹ ಇರುವ ಕಾರಣ ಮಲ್ಲಿಕಾರ್ಜುನ ಖರ್ಗೆಜಿಯವರಿಗೆ ಅಭಿನಂದನಾ ಸಮಾರಂಭ ಇಟ್ಟುಕೊಂಡು, ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.
‘ಮಲ್ಲಿಕಾರ್ಜುನ ಖರ್ಗೆಯವರನ್ನು ಅದ್ದೂರಿಯಾಗಿ ಸನ್ಮಾನಿಸಿದರೆ ನಮಗೆ ಸಂತಸ. ಆದರೆ ಈಶ್ವರ ಖಂಡ್ರೆ ತಮ್ಮ ಬೇಳೆ ಬೇಯಿಸಿಕೊಳ್ಳಲು ದಿ.ವೈಜನಾಥ ಪಾಟೀಲರ ಶ್ರಮವನ್ನು ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರಿಗೆ ನೀಡುತ್ತಿರುವುದು ಸರಿಯಲ್ಲ. ಸಮಾಜಕ್ಕೆ ತಪ್ಪು ಸಂದೇಶ ನೀಡಲು ಹೊರಟಿದ್ದಾರೆ. ಖಂಡ್ರೆಯವರು, ಸುಖಾ ಸುಮ್ಮನೆ ಮಲ್ಲಿಕಾರ್ಜುನ ಖರ್ಗೆಯವರಿಗೆ ಸನ್ಮಾನದ ಬದಲಿಗೆ ಅಪಮಾನ ಮಾಡಲು ಹೊರಟಿದ್ದಾರೆ’ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.