ಬೀದರ್: ‘ನರೇಂದ್ರ ಮೋದಿ ಅಲೆಯಲ್ಲಿ ಎರಡನೆಯ ಬಾರಿಗೆ ಸಂಸತ್ತಿಗೆ ಆಯ್ಕೆಯಾದ ಕಾರಣ ಭಗವಂತ ಖೂಬಾ ಅವರಿಗೆ ಅಧಿಕಾರದ ಮದ ಏರಿದೆ. ಹೀಗಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ. ಅವರು ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಬೇಕು’ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ರಹೀಂ ಖಾನ್ ಹೇಳಿದರು.
‘ಬ್ರಿಮ್ಸ್ ಆಸ್ಪತ್ರೆ ಕಟ್ಟಡದ ತನಿಖೆಗೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಕ್ಕೆ ನನ್ನನ್ನು ಹುಚ್ಚ ಎಂದು ಟೀಕಿಸಿದ್ದಾರೆ. ಒಮ್ಮೆ ವೈದ್ಯರಿಗೆ ನಾಯಿಗೆ ಹೋಲಿಕೆ ಮಾಡಿದರೆ, ಮತ್ತೊಮ್ಮೆ ರಾಜ್ಯ ಸರ್ಕಾರ ನಾಲಾಯಕ್ ಎಂದು ಹೇಳಿದ್ದಾರೆ. ನಾನು ಉಪ ಚುನಾವಣೆಯಲ್ಲಿ ಆಯ್ಕೆಯಾದಾಗ ಬ್ರಿಮ್ಸ್ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿತ್ತು. ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಯಾರು ಹುಚ್ಚರು ಎನ್ನುವುದು ಇಲ್ಲಿಯೇ ಗೊತ್ತಾಗುತ್ತಿದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
‘ನಾನು ಜನರಿಗೆ ಉಚಿತವಾಗಿ ನೀರು ಕೊಡುತ್ತಿರುವುದು ಸಹಿಸಿಕೊಳ್ಳಲು ಆಗುತ್ತಿಲ್ಲ. ಬೇಸಿಗೆಯಲ್ಲಿ ನಗರದ ಜನತೆಗೆ ನೀರು ಪೂರೈಕೆ ಮಾಡಿದ್ದಕ್ಕೆ ಸರ್ಕಾರದಿಂದ ಹಣ ಪಡೆದಿಲ್ಲ. ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನೀರು ಕೊಟ್ಟು ಹಣ ಪಡೆದ ದಾಖಲೆ ಒದಗಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ’ ಎಂದು ಹೇಳಿದರು.
‘ಖೂಬಾ ನನ್ನೊಂದಿಗೆ ಚೆನ್ನಾಗಿಯೇ ಇದ್ದಾರೆ. ಯಾಕೆ ಇಂತಹ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಗೊತ್ತಿಲ್ಲ. ಅವರ ಸುತ್ತಮುತ್ತ ಇರುವ ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.