ಬೀದರ್: ಜಿಲ್ಲಾ ಪಂಚಾಯಿತಿ ಹಾಗೂ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಬಯಲು ಬಹಿರ್ದೆಸೆ ಮುಕ್ತ ಬೀದರ್ ಜಿಲ್ಲೆ ಅಭಿಯಾನವನ್ನು ಕೇಂದ್ರದ ಲಘು, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಖಾತೆ ಮಾಜಿ ಸಚಿವರೂ ಆದ ಸಂಸದ ಪ್ರತಾಪ್ ಸಾರಂಗಿ ಶ್ಲಾಘಿಸಿದ್ದಾರೆ.
ನವದೆಹಲಿಯಲ್ಲಿ ಅಭಿಯಾನದ ಭಿತ್ತಿಪತ್ರ ಬಿಡುಗಡೆಗೊಳಿಸಿದ ಅವರು, ಬೀದರ್ ಜಿಲ್ಲೆಯ ಅಭಿಯಾನ ನೆರೆ ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಗೂ ಮಾದರಿಯಾಗಬೇಕು ಎಂದು ಹೇಳಿದರು.
ಸ್ವಚ್ಛತೆಯಿಂದ ಸ್ವಸ್ಥ ಹಾಗೂ ಸದೃಢ ಭಾರತ ಕಟ್ಟಲು ಸಾಧ್ಯವಿದೆ. ಹೀಗಾಗಿ ಪ್ರತಿ ಗ್ರಾಮವನ್ನೂ ಬಹಿರ್ದೆಸೆಮುಕ್ತಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರು ಸ್ವಚ್ಛ ಬೀದರ್ ಜಿಲ್ಲೆ ಅಭಿಯಾನ ಶುರು ಮಾಡಿರುವುದು ಉತ್ತಮ ಬೆಳವಣಿಗೆ. ಎಲ್ಲ ರಾಜ್ಯಗಳಲ್ಲೂ ಈ ರೀತಿಯ ಅಭಿಯಾನಗಳು ನಡೆದಲ್ಲಿ ಸ್ವಚ್ಛ ಭಾರತದ ಕನಸು ಬಹು ಬೇಗ ಸಾಕಾರಗೊಳ್ಳಲಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಶಿವಯ್ಯ ಸ್ವಾಮಿ ಅವರು, ಸ್ವಚ್ಛ ಬೀದರ್ ಜಿಲ್ಲೆ ಅಭಿಯಾನದ ಪ್ರಯುಕ್ತ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವಿವಿಧ ಚಟುವಟಿಕೆಗಳ ಮಾಹಿತಿ ನೀಡಿದರು. ಅಭಿಯಾನಕ್ಕೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಗಳು ಹಾಗೂ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ಹಿರಿಯ ಪತ್ರಕರ್ತ ಸಂಜಯ್ ಭಾರದ್ವಾಜ್, ಮುಖಂಡ ಅರುಣ್ ಉಪಾಧ್ಯಾಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.