ಬೀದರ್: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ವಿಧಾನಸಭೆಯ ಪಕ್ಷದ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪುರ ಅವರು ಜುಲೈ 29 ರಂದು ನಗರಕ್ಕೆ ಬರಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಹೇಳಿದರು.
ಅಂದು ಬೆಳಿಗ್ಗೆ 11ಕ್ಕೆ ನಗರದ ಚಿಕ್ಕಪೇಟೆ ರಸ್ತೆಯಲ್ಲಿ ಇರುವ ವೈಬ್ ಹೊಟೇಲ್ನಲ್ಲಿ ರಾಜ್ಯದಲ್ಲಿ ಜಾತ್ಯತೀತ ಜನತಾ ದಳದ ಸಂಘಟನೆ ಬಲವರ್ಧನೆ, ಪಂಚರತ್ನ ದರ್ಶನ ರಥಯಾತ್ರೆ ಹಾಗೂ ಬರುವ ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆ ಕುರಿತು ಸಭೆ ನಡೆಸಲಿದ್ದಾರೆ ಎಂದು ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಜಾತ್ಯತೀತ ಜನತಾ ದಳದ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಜಿಲ್ಲಾ ಘಟಕಗಳ ಅಧ್ಯಕ್ಷರು, ಪಕ್ಷದ ಶಾಸಕರು, ಮಾಜಿ ಶಾಸಕರು, 2023 ರ ವಿಧಾನಸಭೆ ಚುನಾವಣೆಯ ನಿಯೋಜಿತ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕಳೆದ ಏಪ್ರಿಲ್ನಲ್ಲಿ ಪಕ್ಷ ನಡೆಸಿದ ಜನತಾ ಜಲಧಾರೆ ರಥಯಾತ್ರೆಗೆ ರಾಜ್ಯದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಬರುವ ದಿನಗಳಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಪಂಚರತ್ನ ದರ್ಶನ ರಥಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಲಾಗುವುದು. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಬಿ ಖುರೇಶಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ, ಮುಖಂಡರಾದ ಅಸದೊದ್ದಿನ್, ಅಶೋಕಕುಮಾರ ಕರಂಜಿ, ಅಭಿ ಕಾಳೆ, ರಾಜಶೇಖರ ಜವಳೆ, ಅಶೋಕ ಕೋಡಗೆ ಸುದ್ದಿಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.