ADVERTISEMENT

ವ್ಯಕ್ತಿತ್ವ ನಿರ್ಮಾಣ ಚಟುವಟಿಕೆಗಳು ನಡೆಯಲಿ

ಪ್ರಗತಿ ಕೇಂದ್ರಗಳ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ: ಶಾಸಕ ರಹೀಂಖಾನ್ ಅಭಿಮತ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 12:35 IST
Last Updated 28 ಜೂನ್ 2021, 12:35 IST
ಬೀದರ್‌ನ ವಿದ್ಯಾಶ್ರೀ ಪ್ರೌಢಶಾಲೆ ಸಭಾಂಗಣದಲ್ಲಿ ನಡೆದ ಪ್ರಗತಿ ಕೇಂದ್ರಗಳ ಶಿಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಶಾಸಕ ರಹೀಂಖಾನ್ ಮಾತನಾಡಿದರು. ರೇವಣಸಿದ್ದಪ್ಪ ಜಲಾದೆ, ಗಣಪತಿ ಸೋಲಪುರೆ, ರೇವಣಸಿದ್ದ ಜಾಡರ, ಗುರುನಾಥ ರಾಜಗೀರಾ ಇದ್ದರು
ಬೀದರ್‌ನ ವಿದ್ಯಾಶ್ರೀ ಪ್ರೌಢಶಾಲೆ ಸಭಾಂಗಣದಲ್ಲಿ ನಡೆದ ಪ್ರಗತಿ ಕೇಂದ್ರಗಳ ಶಿಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಶಾಸಕ ರಹೀಂಖಾನ್ ಮಾತನಾಡಿದರು. ರೇವಣಸಿದ್ದಪ್ಪ ಜಲಾದೆ, ಗಣಪತಿ ಸೋಲಪುರೆ, ರೇವಣಸಿದ್ದ ಜಾಡರ, ಗುರುನಾಥ ರಾಜಗೀರಾ ಇದ್ದರು   

ಬೀದರ್: ಮಕ್ಕಳ ಉತ್ತಮ ವ್ಯಕ್ತಿತ್ವ ನಿರ್ಮಾಣ ಚಟುವಟಿಕೆಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು ಎಂದು ಶಾಸಕ ರಹೀಂಖಾನ್ ಹೇಳಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಸಮೃದ್ಧಿ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ನಗರದ ವಿದ್ಯಾಶ್ರೀ ಪ್ರೌಢಶಾಲೆ ಸಭಾಂಗಣದಲ್ಲಿ ಬೀದರ್ ತಾಲ್ಲೂಕಿನ ಪ್ರಗತಿ ಕೇಂದ್ರಗಳ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ದೇಶದ ಭವಿಷ್ಯವಾಗಿದ್ದಾರೆ. ಹೀಗಾಗಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಹಾಗೂ ಶಿಕ್ಷಣದಿಂದ ದೂರ ಉಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ದಿಸೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ADVERTISEMENT

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಮಕ್ಕಳನ್ನು ಸಂಸ್ಕಾರಯುತ ವ್ಯಕ್ತಿಗಳನ್ನಾಗಿ ರೂಪಿಸುವುದೇ ಪ್ರಗತಿ ಕೇಂದ್ರಗಳ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.

ಬೀದರ್ ತಾಲ್ಲೂಕಿನಲ್ಲಿ ಇರುವ 140 ಪ್ರಗತಿ ಕೇಂದ್ರಗಳು ಆಟ, ಪಾಠಗಳ ಜತೆಗೆ ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಲಿವೆ. ಶೈಕ್ಷಣಿಕ ಆಸಕ್ತಿ ಮೂಡಿಸುವ ಕೆಲಸ ಮಾಡಲಿವೆ. ಗ್ರಾಮಗಳನ್ನು ಆದರ್ಶ ಗ್ರಾಮಗಳನ್ನಾಗಿ ರೂಪಿಸಲು ಶ್ರಮಿಸಲಿವೆ ಎಂದು ತಿಳಿಸಿದರು.

ಸಂಘದ ಬೀದರ್ ತಾಲ್ಲೂಕು ಸಂಯೋಜಕ ಗುರುನಾಥ ರಾಜಗೀರಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸೌಭಾಗ್ಯವತಿ, ಪ್ರಿಯಂಕಾ ಪಾಟೀಲ, ಗಣಪತಿ ಹಡಪದ ತರಬೇತಿ ನೀಡಿದರು.

ಸಮೃದ್ಧಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪುನೀತ್ ಸಾಳೆ, ಸಂಘದ ಜಿಲ್ಲಾ ಸಂಯೋಜಕ ರೇವಣಸಿದ್ದಪ್ಪ ಜಾಡರ, ವಿದ್ಯಾಶ್ರೀ ಶಾಲೆಯ ಕಾರ್ಯದರ್ಶಿ ಗಣಪತಿ ಸೋಲಪುರೆ, ಸಚಿನ್ ನಾಗೂರೆ ಇದ್ದರು.

ಸಮಾರೋಪ ಸಮಾರಂಭದಲ್ಲಿ ವಿದ್ಯಾಭಾರತಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ. ಎಸ್.ಬಿ. ಸಜ್ಜನಶೆಟ್ಟಿ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.