ADVERTISEMENT

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ವಿಟಿಯುಗೆ ಪ್ರಥಮ ರ್‍ಯಾಂಕ್

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 10:24 IST
Last Updated 6 ಫೆಬ್ರುವರಿ 2020, 10:24 IST
ಬೀದರ್‌ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಎಂ.ಟೆಕ್(ಮಷೀನ್ ಡಿಸೈನ್) ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿದ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಯಾಸ್ಸರ್ ಇಷ್ತ್ಯಾಕ್ ಅಲ್ ಅಮೇರಿ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಎಂ.ಟೆಕ್(ಮಷೀನ್ ಡಿಸೈನ್) ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿದ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಯಾಸ್ಸರ್ ಇಷ್ತ್ಯಾಕ್ ಅಲ್ ಅಮೇರಿ ಅವರನ್ನು ಸನ್ಮಾನಿಸಲಾಯಿತು   

ಬೀದರ್‌: ಎಂ.ಟೆಕ್(ಮಷೀನ್ ಡಿಸೈನ್) ಪರೀಕ್ಷೆಯಲ್ಲಿ ಇಲ್ಲಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಯಾಸ್ಸರ್ ಇಷ್ತ್ಯಾಕ್ ಅಲ್ ಅಮೇರಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್‍ಯಾಂಕ್ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ.

ವಿಟಿಯು ಹಾಗೂ ಜೈನ ವಿಶ್ವವಿದ್ಯಾಲಯದ ತಲಾ ಒಂದು ಚಿನ್ನದ ಪದಕ ಸೇರಿ ಎರಡು ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್‍ಯಾಂಕ್ ಪಡೆದು ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿದ ವಿದ್ಯಾರ್ಥಿಯನ್ನು ಕಾಲೇಜಿನ ಪ್ರಾಚಾರ್ಯ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಸಿಹಿ ತಿನ್ನಿಸಿ ಅಭಿನಂದಿಸಿದರು.

ADVERTISEMENT

ಮಹಮ್ಮದ್ ಯಾಸ್ಸರ್ ಇಷ್ತ್ಯಾಕ್ ಅಲ್ ಅಮೇರಿ ವಿಟಿಯುಗೆ ಪ್ರಥಮ ರ್‍ಯಾಂಕ್ ಗಳಿಸಿ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಡಾ. ಸಂಜೀವರೆಡ್ಡಿ ಕೆ. ಹುಡಗಿಕರ್ ಹೇಳಿದರು.

ಕಲಬುರ್ಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಹಾಗೂ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ ಮಾರ್ಗದರ್ಶನದಲ್ಲಿ ಕಾಲೇಜಿನಲ್ಲಿ ಒದಗಿಸುತ್ತಿರುವ ಗುಣಮಟ್ಟದ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳು ವಿವಿಧ ಪರೀಕ್ಷೆಗಳಲ್ಲಿ ಸಾಧನೆ ತೋರುತ್ತಿದ್ದಾರೆ ಎಂದು ತಿಳಿಸಿದರು.

ಈ ಹಿಂದೆ 2011-12ನೇ ಸಾಲಿನಲ್ಲಿ ಸಿವಿಲ್ ವಿಭಾಗದ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಕಾಲೇಜಿನ ಶಕುಂತಲಾ 10ನೇ ರ್‍ಯಾಂಕ್ , 2017-18ನೇ ಸಾಲಿನ ಇಇಇ ವಿಭಾಗದ ಪರೀಕ್ಷೆಯಲ್ಲಿ ಸುಧಾರಾಣಿ 6ನೇ ರ್ಯಾಂಕ್ ಹಾಗೂ ಸಿವಿಲ್ ವಿಭಾಗದ 5ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ರಾಜಕುಮಾರಿ 10ನೇ ರ್‍ಯಾಂಕ್ ಪಡೆದಿದ್ದಾರೆ ಎಂದು ತಿಳಿಸಿದರು.

ಡಾ. ಶರಣಬಸವಪ್ಪ ಅಪ್ಪ ಅವರು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗಿ ಕಾಲೇಜಿನಲ್ಲಿ ಸಕಲ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ಸರಳ ಬೋಧನಾ ವಿಧಾನ ಅನುಸರಿಸಲು ಉಪನ್ಯಾಸಕರಿಗೆ ಮಾರ್ಗದರ್ಶನ ನೀಡುತ್ತ ಬರುತ್ತಿದ್ದಾರೆ. ವಿದ್ಯಾರ್ಥಿಗಳು ತಯಾರಿಸುವ ಮಾದರಿಗಳಲ್ಲಿ ಉತ್ತಮ ಮಾದರಿಗಳಿಗೆ ನಗದು ಬಹುಮಾನ ನೀಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುತ್ತಿದ್ದಾರೆ ಎಂದು ಹೇಳಿದರು.ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.