ADVERTISEMENT

ಸಾಹಿತ್ಯ, ಸಂಗೀತ, ನೃತ್ಯೋತ್ಸವ ನಾಳೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 2:44 IST
Last Updated 11 ಮಾರ್ಚ್ 2021, 2:44 IST
ಪ್ರೊ. ಎಸ್.ವಿ. ಕಲ್ಮಠ
ಪ್ರೊ. ಎಸ್.ವಿ. ಕಲ್ಮಠ   

ಬೀದರ್: ಪಂಚಾಕ್ಷರ ಗವಾಯಿ, ಪಂಡಿತ ಪುಟ್ಟರಾಜ ಕವಿಗವಾಯಿಗಳ ಪುಣ್ಯತಿಥಿ, ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ 18ನೇ ವಾರ್ಷಿಕೋತ್ಸವದ ಅಂಗವಾಗಿ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಮಾರ್ಚ್ 12 ರಂದು ರಾಜ್ಯಮಟ್ಟದ ಸಾಹಿತ್ಯ, ಸಂಗೀತ ಹಾಗೂ ನೃತ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ. ಕಲ್ಮಠ ತಿಳಿಸಿದರು.

ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಪೂಜೆ, ಮೆರವಣಿಗೆ, ಉದ್ಘಾಟನೆ, ಸಂಗೀತ, ಸನ್ಮಾನ ಹಾಗೂ ಸಮಾರೋಪ ಕಾರ್ಯಕ್ರಮಗಳು ನಡೆಯಲಿವೆ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ ಕರ್ನಾಟಕ ಸಾಹಿತ್ಯ ಸಂಘದಿಂದ ಜಿಲ್ಲಾ ರಂಗ ಮಂದಿರದ ವರೆಗೆ ಸರ್ವಾಧ್ಯಕ್ಷ ಪಂಡಿತ ವೀರಭದ್ರಪ್ಪ ಗಾದಗಿ, ಪಂಡಿತ ಪಂಚಾಕ್ಷರ ಗವಾಯಿ ಹಾಗೂ ಪಂಡಿತ ಪುಟ್ಟರಾಜ ಕವಿಗವಾಯಿಗಳ ಭಾವಚಿತ್ರದ ಮೆರವಣಿಗೆ ಜರುಗಲಿದೆ ಎಂದು ಹೇಳಿದರು.

ADVERTISEMENT

ಬೆಳಿಗ್ಗೆ 11ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಹಾರಕೂಡದ ಚನ್ನವೀರ ಶಿವಾಚಾರ್ಯ, ಬಸವಮುಕ್ತಿ ಮಂದಿರದ ಶಿವಯೋಗೀಶ್ವರ ಸ್ವಾಮೀಜಿ ಸಾನಿಧ್ಯ ವಹಿಸುವರು. ಸಂಘದ ಗೌರವಾಧ್ಯಕ್ಷ ಪ್ರೊ. ದೇವೇಂದ್ರ ಕಮಲ್ ಅಧ್ಯಕ್ಷತೆ ವಹಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ನಿಕಟಪೂರ್ವ ಸರ್ವಾಧ್ಯಕ್ಷ ಬಿ. ಲಕ್ಷ್ಮಣರಾವ್ ಆಚಾರ್ಯ, ಕೆಆರ್‍ಇ ನ್ಯಾಸ್ ಅಧ್ಯಕ್ಷ ಚನ್ನಬಸಪ್ಪ ಹಾಲಹಳ್ಳಿ, ಯಶವಂತ ಯಾತನೂರ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಮಾರಂಭದಲ್ಲಿ ಪಂಚಾಕ್ಷರ ಪ್ರಶಸ್ತಿ, ಪುಟ್ಟರಾಜ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಳಿಕ ಪಂಚಾಕ್ಷರ ಗೋಷ್ಠಿ ಜರುಗಲಿದೆ ಎಂದು ಹೇಳಿದರು.

ಮಧ್ಯಾಹ್ನ 1ರಿಂದ ಸಂಜೆ 7.30 ರ ವರೆಗೆ ಸಂಗೀತ, ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7.30ಕ್ಕೆ ಸಮಾರೋಪ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಸಂಘದ ಕಾರ್ಯದರ್ಶಿ ಬಾಬುರಾವ್ ದಾನಿ, ವೀರಭದ್ರಪ್ಪ ಉಪ್ಪಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.