ಕಮಠಾಣ(ಜನವಾಡ): ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಜನವರಿ 17 ರಿಂದ 19ರ ವರೆಗೆ ಹಮ್ಮಿಕೊಳ್ಳಲಾದ ಜಾನುವಾರು, ಕುಕ್ಕುಟ ಹಾಗೂ ಮತ್ಸ್ಯ ಮೇಳ ರೈತರಿಗೆ ನವೀನ ತಂತ್ರಜ್ಞಾನಗಳನ್ನು ಪರಿಚಯಿಸಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ. ವೀರಣ್ಣ ಹೇಳಿದರು.
ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಮೇಳದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಮೇಳವು ಪಶುಪಾಲನೆ, ಕುಕ್ಕುಟ ಹಾಗೂ ಮೀನುಗಾರಿಕೆಯಲ್ಲಿ ಹೆಚ್ಚಿನ ಲಾಭ ಗಳಿಸಲು ಪ್ರೇರಣೆಯಾಗಲಿದೆ ಎಂದು ತಿಳಿಸಿದರು.
ಪ್ರಾಣಿ, ಜಾನುವಾರು ತಳಿ, ಅಲಂಕಾರಿಕ ಮೀನು, ಮೌಲ್ಯವರ್ಧಿತ ಹಾಲು, ಹಾಲಿನ ಉತ್ಪನ್ನ ಮೊದಲಾದ ವೈವಿಧ್ಯಮಯ ಪ್ರದರ್ಶನಗಳು ಮೇಳದ ಆಕರ್ಷಣೆಯಾಗಲಿವೆ ಎಂದು ಹೇಳಿದರು.
ಮೇಳದಲ್ಲಿ ಕಲ್ಯಾಣ ಕರ್ನಾಟಕದ ಸಾವಿರಾರು ರೈತರು ಹಾಗೂ ಸಾಕುಪ್ರಾಣಿಗಳ ಪ್ರಿಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಬಸವರಾಜ ಅವಟಿ ಮಾತನಾಡಿ, ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮೇಳ ಸಂಘಟಿಸಲಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯ ಬಸವರಾಜ ಭತಮುರ್ಗೆ ಮಾತನಾಡಿ, ಮೇಳದ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.
ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಮಾತನಾಡಿ,
ಹೊಸ ಜ್ಞಾನ ಪಡೆದು, ಪಶು ಪಾಲನೆ ಹಾಗೂ ಮೀನುಗಾರಿಕೆಯಲ್ಲಿ ಅಭಿವೃದ್ಧಿ ಸಾಧಿಸಲು ಮೇಳ ಸಹಕಾರಿಯಾಗಲಿದೆ ಎಂದು ಹೇಳಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಪ್ಪ ವಾಲಿ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್, ಕನ್ನಡಾಂಬೆ ಗೆಳೆಯರ ಬಳಗದ ಅಧ್ಯಕ್ಷ ವಿರೂಪಾಕ್ಷ ಗಾದಗಿ ಮಾತನಾಡಿದರು.
ಅಂಚೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಗಲಾ ಭಾಗವತ್, ಉದ್ಯಮಿ ಅಶೋಕ್ ರೇಜಂತಲ್, ಪ್ರಮುಖರಾದ ಬಿ.ಎಸ್. ಕುದರೆ, ಸುಬ್ರಹ್ಮಣ್ಯ ಪ್ರಭು, ಗೌತಮ ಅರಳಿ, ರವಿ ದೇಶಮುಖ, ಸುರೇಶ ಪಾಟೀಲ, ಹಾವಶೆಟ್ಟಿ ಪಾಟೀಲ, ರವಿ ಮೂಲಗೆ, ಪಶು ವೈದ್ಯಕೀಯ ಕಾಲೇಜಿನ ಡೀನ್ ಡಾ.ಎಂ.ಕೆ. ತಾಂದಳೆ, ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಚನ್ನಪ್ಪಗೌಡ ಬಿರಾದಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.