ಬೀದರ್: ಹೊಂದಾಣಿಕೆ ಕೊರತೆಯಿಂದ ವೈವಾಹಿಕ ಜೀವನದಲ್ಲಿ ಬಿರುಕು ಕಾಣಿಸಿಕೊಂಡು ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಯ ಮನವೊಲಿಸಿ ಅವರು ಮತ್ತೆ ಒಂದಾಗಿ ಜೀವನ ನಡೆಸುವಂತೆ ಮಾಡುವಲ್ಲಿ ಇಲ್ಲಿಯ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ಯಶಸ್ವಿಯಾಗಿದೆ.
ವಿವಾಹ ವಿಚ್ಛೇದನ ಕೋರಿ ನ್ಯಾಯಾಲಯದ ಕಟ್ಟೆ ಏರಿದ್ದ ಜೋಡಿ ಲೋಕ್ ಅದಾಲತ್ನಲ್ಲಿ ಜೋಡಿ ಒಂದಾದರು. ಐದು ವರ್ಷಗಳ ಹಿಂದೆ ಈ ದಂಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜಿಲ್ಲಾ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಸಚಿನ್ ಕೌಶಿಕ್ ಆರ್.ಎನ್ ಅವರು ಮನವೊಲಿಕೆಯಿಂದ ತಮ್ಮಲ್ಲಿನ ವೈಮನಸ್ಸನ್ನು ಮರೆತು ವಿವಾಹ ವಿಚ್ಛೇದನ ಅರ್ಜಿಯನ್ನು ಹಿಂಪಡೆದರು.
ಅದಾಲತ್ನಲ್ಲಿ ಒಟ್ಟು 18 ವಿಚ್ಛೇದನ ಪ್ರಕರಣಗಳನ್ನು ಗುರುತಿಸಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಒಟ್ಟು 10,015 ವಾಜ್ಯ ಪ್ರಕರಣಗಳನ್ನು ಗುರುತಿಸಲಾಗಿತ್ತು. ಈ ಪೈಕಿ 5,354 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ವಾಜ್ಯ ಪೂರ್ವದ 437 ಪ್ರಕರಣಗಳನ್ನು ಇತ್ಯರ್ಥ ಮಾಡಿ ₹ 1,41,49,950 ಪರಿಹಾರ ರೂಪದಲ್ಲಿ ನೀಡಲು ಆದೇಶಿಸಲಾಯಿತು. ಇನ್ನೂ ಬಾಕಿ ಇರುವ ಪ್ರಕರಣಗಳಲ್ಲಿ (ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣಗಳು) ₹ 5,05,40,363 ವಸೂಲಿ ಮಾಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚೇಗರೆಡ್ಡಿ, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.