ADVERTISEMENT

ಹುಮನಾಬಾದ್: ಜನರಲ್ಲಿ ಕೋವಿಡ್ ಅರಿವು ಮೂಡಿಸಿ -ಶಾಸಕ ರಾಜಶೇಖರ ಪಾಟೀಲ

ಅಧಿಕಾರಿಗಳಿಗೆ ಶಾಸಕ ರಾಜಶೇಖರ ಪಾಟೀಲ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಮೇ 2021, 4:56 IST
Last Updated 4 ಮೇ 2021, 4:56 IST
ಹುಮನಾಬಾದ್‌ನಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು
ಹುಮನಾಬಾದ್‌ನಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು   

ಹುಮನಾಬಾದ್: ‘ಕೋವಿಡ್– 19ರ ಪ್ರಕರಣಗಳ ಸಂಖ್ಯೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಕೋವಿಡ್ ಅರಿವು ಮೂಡಿಸಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕರಿಗೆ ಕೋವಿಡ್ ಲಸಿಕೆ, ಪರೀಕ್ಷೆ, ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ADVERTISEMENT

‘ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಅಂಗನವಾಡಿ, ಆಶಾ ಕಾರ್ಯಕರ್ತರು ಗ್ರಾಮಗಳ ಮಟ್ಟದಲ್ಲಿ ಕೋವಿಡ್ ಲಸಿಕೆಯನ್ನು ಪಡೆಯಲು ಜನರು ಭಯ ಪಡುತ್ತಿರುವ ಜನರಿಗೆ ಲಸಿಕೆಯ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

‘ಸೋಂಕಿತರಿಗೆ ಬೆಡ್, ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ರೋಗಿಗಳು ಪರದಾಡುತ್ತಿದ್ದಾರೆ. ಪಿ.ಎಂ ಕೇರ್‌ನಿಂದ ಕರ್ನಾಟಕಕ್ಕೆ 35 ಸಾವಿರ ವೆಂಟಿಲೇಟರ್‌ಗಳನ್ನು ಒದಗಿಸಿದೆ. ಆದರೆ ರಾಜ್ಯ ಸರ್ಕಾರ ಮಾತ್ರ 18 ಸಾವಿರ ವೆಂಟಿಲೇಟರ್‌ಗಳನ್ನು ಉಪಯೋಗಿಸುತ್ತಿದೆ. ಇನ್ನುಳಿದವು ಎಲ್ಲಿವೆ. ಸರ್ಕಾರ ಕೋವಿಡ್ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತಿದೆ. ಅವರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಕೋವಿಡ್ ಸೋಂಕಿಗೆ ಬಲಿಯಾಗಿ ಜನರು ನರಳಾಡುತ್ತಿದ್ದಾರೆ’ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಮಾತನಾಡಿ, ‘ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮ ಇಲ್ಲ. ಭಯವನ್ನು ಬಿಟ್ಟು ಪ್ರತಿಯೂಬ್ಬರು ಲಸಿಕೆಯನ್ನು ಪಡೆಯಬೇಕು. ಕೋವಿಡ್ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆದರೆ ಯಾವುದೇ ತೊಂದರೆ ಇಲ್ಲ’ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಡಾಕುಳಗಿ, ತಹಶೀಲ್ದಾರ್ ಜೈಶ್ರೀ, ಚಿಟಗುಪ್ಪ ತಹಶೀಲ್ದಾರ್ ಮಹಮ್ಮದ್ ಜಿಯಾವುಲ್ಲಾ, ಕೋವಿಡ್ ನೋಡಲ್ ಅಧಿಕಾರಿ ಡಾ.ಗೋವಿಂದ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಚಿಟಗುಪ್ಪ ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.