ADVERTISEMENT

ಕಾರ್ಮಿಕರ ನೇರ ನೇಮಕಾತಿ ಮಾಡಿ

ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಮೇ 2022, 14:00 IST
Last Updated 20 ಮೇ 2022, 14:00 IST
ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ನೇಮಕಾತಿ ಮೂಲಕ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಬೀದರ್‌ನ ಡಾ.ಅಂಬೇಡ್ಕರ್‌ ಪ್ರತಿಭಟನೆ ನಡೆಸಿದರು
ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ನೇಮಕಾತಿ ಮೂಲಕ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಬೀದರ್‌ನ ಡಾ.ಅಂಬೇಡ್ಕರ್‌ ಪ್ರತಿಭಟನೆ ನಡೆಸಿದರು   

ಬೀದರ್: ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ನೇಮಕಾತಿ ಮೂಲಕ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮ ನೇತೃತ್ವದಲ್ಲಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಮಹಾವೀರ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಸ ಸಾಗಿಸುವ ವಾಹನ ಚಾಲಕರು. ವಾಟರ್‌ಮ್ಯಾನ್, ಡಾಟಾ ಆಪರೇಟರ್, ಕಸ ನಿರ್ವಹಣೆ ಸಹಾಯಕರು, ಒಳಚರಂಡಿ ಕಾರ್ಮಿಕರು, ಸ್ಮಶಾನ ಕಾವಲುಗಾರರು, ಮೇಲ್ವಿಚಾರಕರು 30 ವರ್ಷಗಳಿಂದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನೇ ನೇರವಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ನಗರಗಳ ಸ್ವಚ್ಛತೆ ಕುಡಿಯುವ ನೀರಿನ ನಿರ್ವಹಣೆಯಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ. ತೀವ್ರ ಹೋರಾಟದ ನಂತರ 2017ರಲ್ಲಿ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಅಂದಿನ ರಾಜ್ಯ ಸರಕಾರ ನಿರ್ಧರಿಸಿತು. ಅದೇ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಕರ್ತವ್ಯ ನಿರ್ವಹಿಸುವ ಉಳಿದ ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಪದ್ಧತಿಯಲ್ಲಿ ಉಳಿಸಿ ತಾರತಮ್ಯ ಎಸಗಿತು ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಹೊರ ಗುತ್ತಿಗೆ ನೌಕರರ ಬೇಡಿಕೆಯನ್ನು ಸ್ಪಂದಿಸದಿದ್ದರೆ ಜುಲೈ 1ರಿಂದ ರಾಜ್ಯದಾದ್ಯಂತ ಸ್ವಚ್ಛತೆ ಕುಡಿಯುವ ನೀರು ಸರಬರಾಜು ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಏಸುದಾಸ, ಜೆಡಿಎಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ, ಹೋರಾಟಗಾರ ಮಾರುತಿ ಕಂಠಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.