ಬೀದರ್: ‘ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಗಳಲ್ಲಿ ಕೇವಲ 238 ಅರ್ಜಿಗಳು ಇತ್ಯರ್ಥವಾಗಿವೆ. ಬಾಕಿ ಉಳಿದ ಅರ್ಜಿಗಳ ವಿಲೇವಾರಿಗೆ ಗಮನ ಹರಿಸಬೇಕು’ ಎಂದು ತಿಳಿಸಿದರು.
‘ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶದ ಬೀದಿ ಬದಿ ವ್ಯಾಪಾರಿಗಳು ಕೋವಿಡ್ ಕಾರಣ ಸಂಕಷ್ಟ ಎದುರಿಸಿದ್ದಾರೆ. ಹೀಗಾಗಿ ವಿವಿಧ ಬ್ಯಾಂಕ್ಗಳಲ್ಲಿ ಬಾಕಿ ಉಳಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಬೇಕು’ ಎಂದು ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೊಟಪ್ಪಗೋಳ ಮಾತನಾಡಿ, ‘ನಗರ ಹಾಗೂ ಪಟ್ಟಣ ಪ್ರದೇಶದ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅರ್ಜಿ ಸಲ್ಲಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದರು.
ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಂ.ಕಮತಗಿ, ನಗರಸಭೆ ಆಯುಕ್ತ ರವಿಂದ್ರನಾಥ ಅಂಗಡಿ, ಹುಮನಾಬಾದ್, ಬಸವಕಲ್ಯಾಣ, ಭಾಲ್ಕಿ, ಚಿಟಗುಪ್ಪ, ಔರಾದ್, ಹಳ್ಳಿಖೇಡ್(ಬಿ) ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಅಧಿಕಾರಿಗಳು ಹಾಗೂ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.