ADVERTISEMENT

ಬೀದರ್‌ | ಅತಿವೃಷ್ಟಿ: ಹಾನಿ ಪ್ರದೇಶಗಳಿಗೆ ಜನಪ್ರತಿನಿಧಿಗಳ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 6:58 IST
Last Updated 1 ಸೆಪ್ಟೆಂಬರ್ 2025, 6:58 IST
ಕಮಲನಗರ ತಾಲ್ಲೂಕಿನ ಸೋನಾಳ ಗ್ರಾಮದಲ್ಲಿ ಮಾಂಜ್ರಾ ನದಿ ನೀರು ನುಗ್ಗಿರುವ ಹೊಲಗಳನ್ನು ಶಾಸಕ ಪ್ರಭು ಚವ್ಹಾಣ ವೀಕ್ಷಿಸಿದರು 
ಕಮಲನಗರ ತಾಲ್ಲೂಕಿನ ಸೋನಾಳ ಗ್ರಾಮದಲ್ಲಿ ಮಾಂಜ್ರಾ ನದಿ ನೀರು ನುಗ್ಗಿರುವ ಹೊಲಗಳನ್ನು ಶಾಸಕ ಪ್ರಭು ಚವ್ಹಾಣ ವೀಕ್ಷಿಸಿದರು    

ಕಮಲನಗರ: ಮಹಾರಾಷ್ಟ್ರದ ಧನ್ನೇಗಾಂವ ಜಲಾಶಯದಿಂದ ಮಾಂಜ್ರಾ ನದಿಗೆ ಹೆಚ್ಚಿನ ನೀರು ಬಿಟ್ಟ ಹಿನ್ನೆಲೆಯಲ್ಲಿ ತಾಲ್ಲೂಕಿನ ಮಾಂಜ್ರಾ ನದಿ ಪಕ್ಕದ ವಿವಿಧ ಗ್ರಾಮದ ರೈತರ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾದ ಪ್ರದೇಶಗಳಿಗೆ ಭಾನುವಾರ ಶಾಸಕ ಪ್ರಭು ಚವ್ಹಾಣ ಭೇಟಿ ನೀಡಿ ಪರಿಶೀಲಿಸಿದರು.

ಹೊರಂಡಿ, ಸೋನಾಳ, ಕಾಳಗಾಪೂರ, ಖೇಡ್, ಹೊಳಸಮುದ್ರ, ಸಾವಳಿ, ಸಂಗಮ್, ತೊರಣಾ, ಬಳತ್, ಹಾಲಹಳ್ಳಿ, ನಿಡೋದಾ, ರಕ್ಷ್ಯಾಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂಚರಿಸಿ ಬೆಳೆ ಹಾನಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ರೈತರು ಬೆಳೆ ಹಾನಿಯ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿ ತಮ್ಮ ಅಳಲು ತೊಡಿಕೊಂಡರು.

ADVERTISEMENT

ಶಾಸಕ ಪ್ರಭು ಚವ್ಹಾಣ, ‘ಕ್ಷೇತ್ರದಲ್ಲಿ ತೀವ್ರ ಮಳೆಯಾಗುತ್ತಿರುವುದನ್ನು ಕಂಡು ತಕ್ಷಣ ಮುಖ್ಯಮಂತ್ರಿ, ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಖುದ್ದಾಗಿ ಭೇಟಿಮಾಡಿ ಬೆಳೆ ಹಾನಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ,ಅಧಿವೇಶನದಲ್ಲಿಯೂ ಈ ಬಗ್ಗೆ ಗಮನ ಸೆಳೆದಿದ್ದೇನೆ. ರೈತರಿಗೆ ಪರಿಹಾರ ವಿತರಿಸಲು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದೇನೆ’ ಎಂದು ಹೇಳಿದರು.

ಅಧಿಕಾರಿಗಳು ಮತ್ತು ಸಿಬ್ಬಂದಿ ನೊಂದವರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು. ಬೆಳೆ, ಮನೆ ಮತ್ತು ಜೀವ ಹಾನಿಯ ಕುರಿತು ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಿ ಅಗತ್ಯ ಪರಿಹಾರ ಕಲ್ಪಿಸಲು ಯತ್ನಿಸಬೇಕು. ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಎಲ್ಲ ಸಮೀಕ್ಷಾ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಮಾಂಜ್ರಾ ನದಿ ಪ್ರವಾಹ ಹಾಗೂ ಮಳೆ ಹಾನಿಯಿಂದ ತೊಂದರೆ ಅನುಭವಿಸಿದ ಎಲ್ಲರನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಮಳೆಯಿಂದ ಹಾನಿಗೊಳಗಾದ ಎಲ್ಲ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ಭೇಟಿ ನೀಡಿದ ಪ್ರತಿ ಗಾಮದಲ್ಲಿ ಸುಮಾರು 500 ರಿಂದ 1,000 ಎಕರೆಯಷ್ಟು ಬೆಳೆ ಹಾನಿಯಾಗಿದೆ. ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ 50 ಸಾವಿರ ಎಕರೆಯಷ್ಟು ಬೆಳೆ ಹಾನಿಯಾಗಿರುವ ಅಂದಾಜಿದೆ. ರಸ್ತೆ, ಸೇತುವೆ, ಕೆರೆ-ಕಟ್ಟೆಗಳು, ಬ್ರಿಡ್ಜ್‌ ಕಂ ಬ್ಯಾರೇಜ್‍ಗಳು, ಶಾಲೆ, ಅಂಗನವಾಡಿ ಕೇಂದ್ರಗಳು ಹಾಗೂ ವಿವಿಧ ಸರ್ಕಾರಿ ಕಚೇರಿಗಳು ಹಾನಿಗೆ ಒಳಗಾಗಿವೆ ಎಂದು ತಿಳಿಸಿದರು.

ಔರಾದ(ಬಿ), ಕಮಲನಗರ ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ರೈತರಿಗೆ ಪರಿಹಾರ ಘೋಷಣೆ ಮಾಡಬೇಕು. ಬೆಳೆ ವಿಮೆ ಸೌಲಭ್ಯ ಎಲ್ಲರಿಗೂ ತಲುಪಿಸಬೇಕು. ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ, ಬ್ರಿಜ್ ಕಂ ಬ್ಯಾರೇಜ್, ಶಾಲೆ, ಅಂಗನವಾಡಿ, ಸರ್ಕಾರಿ ಕಛೇರಿಗಳ ದುರಸ್ತಿ ಮತ್ತು ಸುಧಾರಣೆಗೆ ಔರಾದ(ಬಿ) ಕ್ಷೇತ್ರಕ್ಕೆ 100 ಕೋಟಿಗೂ ಹೆಚ್ಚಿನ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಕಮಲನಗರ ತಾಲ್ಲೂಕಿನ ಸಂಗಮ ಕ್ರಾಸ್ ಬಳಿಯ ಮಾಂಜ್ರಾ ನದಿಗೆ ಶಾಸಕ ಪ್ರಭು ಚವ್ಹಾಣ ಭೇಟಿ ನೀಡಿದರು.

ತಹಶೀಲ್ದಾರ್ ಅಮೀತಕುಮಾರ ಕುಲಕರ್ಣಿ, ತಾ.ಪಂ. ಇಒ ಹಣಮಂತರಾಯ ಕೌಟಗೆ, ಔರಾದ ಸಹಾಯಕ ಕೃಷಿ ನಿರ್ದೇಶಕ ಧುಳಪ್ಪ ಹೊಸಾಳೆ, ಬಿಇಒ ರಂಗೇಶ, ಲೋಕೋಪಯೋಗಿ ಇಲಾಖೆ ಎಇಇ ಪ್ರೇಮಸಾಗರ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ರೈತ ಮೋರ್ಚಾ ಅಧ್ಯಕ್ಷ ಶಿವರಾಜ ಅಲ್ಮಾಜೆ, ಶಿವಕುಮಾರ ಝುಲ್ಫೆ, ನಾಗೇಶ ಪತ್ರೆ, ಪ್ರವೀಣ ಕಾರಬಾರಿ, ಭರತ ಕದಂ, ಸುರೇಶ ಭೋಸ್ಲೆ ಸೇರಿದಂತೆ ಇತರರಿದ್ದರು.

ಕಾಳಗಾಪೂರ ಗ್ರಾಮದ ರೈತರ ಹೊಲಗಳಲ್ಲಿ ಮಾಂಜ್ರಾ ನದಿ ನೀರು ನುಗ್ಗಿರುವುದನ್ನು ಶಾಸಕ ಪ್ರಭು ಚವ್ಹಾಣ ವೀಕ್ಷಿಸಿದರು.
ಕಮಲನಗರ ತಾಲ್ಲೂಕು ಮಟ್ಟದಲ್ಲಿರುವ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಇರಬೇಕು. ರೈತರ ಬೆಳೆ ಹಾನಿಯಾಗಿರುವ ಕುರಿತು ಪಾರದರ್ಶಕತೆಯಿಂದ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು 
ಪ್ರಭು.ಬಿ.ಚವ್ಹಾಣ ಶಾಸಕ

ಸಂಸದ ಖಂಡ್ರೆ ಪರಿಶೀಲನೆ

ಭಾಲ್ಕಿ: ತಾಲ್ಲೂಕಿನ ವಿವಿಧೆಡೆ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಸದ ಸಾಗರ್ ಖಂಡ್ರೆ ಭೇಟಿ ನೀಡಿ, ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.

ಈಚೆಗೆ ಸುರಿದ ಭಾರಿ ಮಳೆಗೆ ಸಾವಿರಾರು ಎಕರೆಯಲ್ಲಿನ ಬೆಳೆಗಳು ನಾಶವಾಗಿವೆ. ತುರ್ತು ಸಮೀಕ್ಷೆ ನಡೆಸಿ ವಿಮೆ ಕಂಪನಿಗಳಿಂದ ಸೂಕ್ತ ಪರಿಹಾರ ದೊರಕಿಸಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆಗಳಿಗೆ ಹಾನಿಯಾದ ಕುಟುಂಬಗಳಿಗೆ ತಕ್ಷಣದ ಪರಿಹಾರ ನಿಧಿ ನೀಡುವಂತೆ, ರಸ್ತೆಗಳು, ಸೇತುವೆಗಳು, ವಿದ್ಯುತ್ ಮತ್ತು ನೀರು ಸರಬರಾಜು ಸೇರಿದಂತೆ ಮೂಲಸೌಲಭ್ಯಗಳನ್ನು ತುರ್ತಾಗಿ ಪುನಃ ಸ್ಥಾಪನೆ ಮಾಡುವಂತೆ ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು, ರೈತರು ಇದ್ದರು.

‘ಎಕರೆಗೆ ₹50 ಸಾವಿರ ಪರಿಹಾರ ನೀಡಿ’

ಭಾಲ್ಕಿ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ರೈತರು ಬೆಳೆದ ಬೆಳೆಗಳು ಹಾಳಾಗಿದ್ದು, ಸರ್ಕಾರ ಪ್ರತಿ ಎಕರೆಗೆ ₹50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡರೂ ಆದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಆಗ್ರಹಿಸಿದರು.

ತಾಲ್ಲೂಕಿನ ಆನಂದವಾಡಿ, ಲಖನಗಾಂವ ಗ್ರಾಮಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.

‘ನೆರೆ ಮತ್ತು ಅತಿವೃಷ್ಟಿಯಿಂದ ಬೆಳೆಗಳು ಸಂಪೂರ್ಣವಾಗಿ ಹಾಳಾಗಿವೆ. ರಾಜ್ಯ ಸರ್ಕಾರ ಪ್ರಕೃತಿ ವಿಕೋಪದ ನಿಧಿಯಿಂದ ಪ್ರತಿ ಎಕರೆಗೆ ₹50 ಸಾವಿರದಂತೆ ಪರಿಹಾರ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ನದಿ ದಡದಲ್ಲಿರುವ ಜಮೀನುಗಳಿಂದ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದ್ದು, ಅಂತಹ ರೈತರಿಗೆ ವಿಶೇಷ ಪರಿಹಾರ ನೀಡಬೇಕು. ಬೆಳೆ ವಿಮೆ ಕಂತು ಕಟ್ಟಿದವರಿಗೆ ವಿಮೆ ಹಣ ಕೊಡಿಸಬೇಕು’ ಎಂದು ಒತ್ತಾಯಿಸಿದರು.

ತಾಲ್ಲೂಕು ಅಧ್ಯಕ್ಷ ಅಧ್ಯಕ್ಷ ವೀರಣ್ಣ ಕಾರಬಾರಿ, ಮುಖಂಡರಾದ ಶಫಿ ಭಾತಂಬ್ರಾ, ಕೆ.ಡಿ. ಗಣೇಶ, ಜೈ ಭೀಮ್ ಬಂಧು, ಚನ್ನಬಸವ ಬಳತೆ, ಬಾಬುರಾವ್ ಧೂಪೆ, ಪಂಡರಿ ಮೇತ್ರೆ, ಸಂಗಮೇಶ ಟೆಂಕಾಳೆ, ಡಾ. ಜಗದೀಶ ಭೂರೆ, ಕೈಲಾಸ ಪಾಟೀಲ, ಶಿವಕುಮಾರ ಆಣದೂರೆ, ಕಲ್ಯಾಣರಾವ್ ಚಾಟೆ, ಜಗದೀಶ, ಕಲ್ಲಪ್ಪ ಭೂರೆ, ಶಿವರಾಜ ಭೂರೆ, ಶ್ರೀಮಂತ ಭೂರೆ, ಬಾಬುರಾವ್ ಭೂರೆ ಇದ್ದರು.

ಸಿಎಂ ₹50 ಕೋಟಿ ಅನುದಾನ

ಬೀದರ್‌: ಪ್ರವಾಹದಿಂದ ಹಾನಿಗೀಡಾದವರಿಗೆ ಪರಿಹಾರ ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತತ್‌ಕ್ಷಣದ ಪರಿಹಾರವಾಗಿ ₹50 ಕೋಟಿ ಅನುದಾನ ನೀಡಿದ್ದಾರೆ. ಇನ್ನೂ ₹100 ಕೋಟಿ ಹೆಚ್ಚುವರಿ ಪರಿಹಾರ ಮಂಜೂರು ಮಾಡಲು ಮನವಿ ಮಾಡಲಾಗಿದೆ ಎಂದು ಪೌರಾಡಳಿತ ಮತ್ತು ಹಜ್‌ ಖಾತೆ ಸಚಿವ ರಹೀಂ ಖಾನ್‌ ತಿಳಿಸಿದರು.

ತಾಲ್ಲೂಕಿನ ಪ್ರವಾಹ ಪೀಡಿತ ಸಂಗನಳ್ಳಿ, ಇಸ್ಲಾಂಪೂರ, ಇಮಾಮ್‌ಬಾದ್, ಮಾಲೆಗಾಂವ್, ಕಪಲಾಪೂರ, ಅಲಮಾಸಪುರ, ಜಾಂಪಾಡ್‌, ಅಲ್ಲಾಪೂರ ಹಾಗೂ ನೇಮತಾಬಾದ್‌ ಗ್ರಾಮಗಳಿಗೆ ಭಾನುವಾರ ಭೇಟಿ ಕೊಟ್ಟು ಬೆಳೆ ಹಾನಿ ಪರಿಶೀಲಿಸಿ, ರೈತರಿಗೆ ಪರಿಹಾರದ ಭರವಸೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. 

ಅಲಿಯಂಬರ್‌ ಗ್ರಾಮದಲ್ಲಿ ಹಾನಿಗೊಳಗಾದ ಸೇತುವೆಯ ದುರಸ್ತಿಗೆ ₹5 ಕೋಟಿ ಬಿಡುಗಡೆ ಮಾಡಲಾಗುವುದು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಾನಿಗೊಳಗಾದ ರಸ್ತೆ, ಸೇತುವೆ ದುರಸ್ತಿ ಕಾರ್ಯ ಶೀಘ್ರವೇ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಕಳೆದ ಮೂರು ದಿನಗಳಿಂದ ಸತತವಾಗಿ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಸಪ್ಟೆಂಬರ್ 6ರಿಂದ ಮತ್ತೆ ಮಳೆ ಪ್ರವಾಹ ಪರಿಶೀಲನಾ ಕಾರ್ಯ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಭಾರಿ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳೆದಿದ್ದ ಹೆಸರು, ಉದ್ದು ಸೋಯಾಬೀನ್, ತೊಗರಿ ಸಂಪೂರ್ಣವಾಗಿ ನಾಶವಾಗಿವೆ. ಹಲವು ಕಡೆಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಪ್ರತಿಯೊಂದು ವಿಪತ್ತು ಮತ್ತು ಹಾನಿಯ ವರದಿ ಮಾಡಲು, ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಲು ಜಂಟಿ ಇಲಾಖಾ ಸಮೀಕ್ಷೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಬೆಳೆ ಹಾನಿ ಮತ್ತು ಮನೆ ಹಾನಿಗೆ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು ಎಂದರು.

ಬೀದರ್‌ ಉಪವಿಭಾಗಾಧಿಕಾರಿ ಮುಹಮ್ಮದ್‌ ಶಕೀಲ್, ಬೀದರ್‌ ತಹಶೀಲ್ದಾರ್ ರವೀಂದ್ರ ದಾಮಾ, ಕೃಷಿ ಇಲಾಖೆ ಉಪನಿರ್ದೇಶಕ ಇಕ್ಬಾಲ್ ಅನ್ಸಾರಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.