ಬೀದರ್: ಮೈಸೂರು ವಿಶ್ವವಿದ್ಯಾಲಯ ನಡೆಸಿದ ಸ್ನಾತಕೋತ್ತರ ವಿಭಾಗದ ತತ್ವಶಾಸ್ತ್ರ ಪರೀಕ್ಷೆಯಲ್ಲಿ ಆರು ಚಿನ್ನದ ಪದಕ ಹಾಗೂ ಮೂರು ನಗದು ಬಹುಮಾನ ಪಡೆದ ಬೀದರ್ ತಾಲ್ಲೂಕಿನ ಗ್ರಾಮೀಣ ಪ್ರತಿಭೆ ಮೀನಾಕ್ಷಿ ಅವರನ್ನು ಈಚೆಗೆ ಜಿಲ್ಲಾಡಳಿತದ ವತಿಯಿಂದ ಸನ್ನಾನಿಸಲಾಯಿತು.
ಜಿಲ್ಲಾಧಿಕಾರಿ ರಾಮಚಂದ್ರನ್ ಅವರು ಮೀನಾಕ್ಷಿಗೆ ಶಾಲು ಹೊದಿಸಿ ಅಭಿನಂದಿಸಿದರು. ನಂತರ ಮಾತನಾಡಿ, ‘ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ. ಮೀನಾಕ್ಷಿ ಅವರಂಥ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆಯು ಈ ಭಾಗದ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು’ ಎಂದರು.
ಬೀದರ್ ತಾಲ್ಲೂಕಿನ ಶಹಾಪುರದ ಭೀಮಾಶಂಕರ ಮತ್ತು ಶೋಭಾವತಿ ದಂಪತಿಯ ಪುತ್ರಿ ಮೀನಾಕ್ಷಿ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ. ಉಡುಪಿಯಲ್ಲಿ ಪಿಯುಸಿ, ಮಂಗಳೂರಿನಲ್ಲಿ ಪದವಿ ಓದಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
‘ನನ್ನ ತಂದೆ-ತಾಯಿ ದಿನಗೂಲಿ ಕಾರ್ಮಿಕರಾಗಿದ್ದರೂ ಉತ್ತಮ ಶಿಕ್ಷಣ ಕೊಡಿಸಿದ್ದಾರೆ. ನನ್ನ ತಂದೆಗೆ ಐವರು ಮಕ್ಕಳು, ಎಲ್ಲರೂ ಪದವಿ ಪಡೆದಿದ್ದಾರೆ’ ಎಂದು ಮೀನಾಕ್ಷಿ ಹೇಳಿದರು.
‘ಐಎಎಸ್ ಅಧಿಕಾರಿಯಾಗಬೇಕು ಎನ್ನುವುದು ನನ್ನ ಗುರಿ. ಹೀಗಾಗಿ ಒಂದೂವರೆ ವರ್ಷದಿಂದ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.