ADVERTISEMENT

ಕ್ರೀಡಾಂಗಣದಲ್ಲಿ ಅದ್ದೂರಿ ಸ್ವಾತಂತ್ರ‍್ಯ ದಿನಾಚರಣೆ: ತಹಶೀಲ್ದಾರ್

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 6:29 IST
Last Updated 7 ಆಗಸ್ಟ್ 2025, 6:29 IST
ಔರಾದ್ ತಹಶೀಲ್ದಾರ್ ಕಚೇರಿಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮಹೇಶ್ ಪಾಟೀಲ ಮಾತನಾಡಿದರು
ಔರಾದ್ ತಹಶೀಲ್ದಾರ್ ಕಚೇರಿಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮಹೇಶ್ ಪಾಟೀಲ ಮಾತನಾಡಿದರು   

ಔರಾದ್: ಈ ಬಾರಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಬೀದರ್ ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ್ ಮಹೇಶ ಪಾಟೀಲ ತಿಳಿಸಿದರು.

ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಪ್ರತಿವರ್ಷ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸ್ವಾತಂತ್ರ‍್ಯ ದಿನ ಆಚರಿಸಲಾಗುತ್ತಿದ್ದು, ಸ್ಥಳೀಯರು ಹಾಗೂ ಸಂಘ ಸಂಸ್ಥೆ ಪ್ರತಿನಿಧಿಗಳ ಅಭಿಪ್ರಾಯದ ಮೇರೆಗೆ ಈ ಸಲ ತಾಲ್ಲೂಕು ಕ್ರೀಡಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.

ತಾಲ್ಲೂಕು ಕ್ರೀಡಾಂಗಣದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಪಟ್ಟಣ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.
ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಪೊಲೀಸ್, ಗೃಹರಕ್ಷಕ ದಳ, ಶಾಲಾ ಮಕ್ಕಳಿಂದ ಪರೇಡ್ ನಡೆಸಲಾಗುವುದು ಹಾಗೂ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು ಎಂದು ಹೇಳಿದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ. ರಂಗೇಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರ ಮೇತ್ರೆ, ತಾಪಂ. ಸಹಾಯಕ ನಿರ್ದೆಶಕ ಶಿವಕುಮಾರ ಘಾಟೆ, ಸಿಪಿಐ ರಘುವೀರಸಿಂಗ್ ಠಾಕೂರ್, ಮುಖಂಡ ಡಾ. ಫಯಾಜ್ಅಲಿ, ವೈಜಿನಾಥ ಬುಟ್ಟೆ, ಅನೀಲ ದೇವಕತೆ, ಪ್ರಾಂಶುಪಾಲ ಓಂಪ್ರಕಾಶ ದಡ್ಡೆ, ರತ್ನದೀಪ ಕಸ್ತೂರೆ, ಬಸವರಾಜ ಹಳ್ಳೆ ಸೇರಿದಂತೆ ಸ್ಥಳೀಯರು ಇದ್ದರು.

ಸಭೆಗೆ ಅಧಿಕಾರಿಗಳ ಗೈರು: ಆಕ್ಷೇಪ

ಔರಾದ್: ಸ್ವಾತಂತ್ರ‍್ಯ ದಿನಾಚರಣೆ ಪೂರ್ವ ಸಿದ್ಧತೆಗಾಗಿ ಬುಧವಾರ ಕರೆಯಲಾಗಿದ್ದ ಸಭೆಗೆ ಬಹುತೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದರು. ಕೇವಲ ನಾಲ್ಕು ಇಲಾಖೆ ಅಧಿಕಾರಿಗಳು ಹೊರತುಪಡಿಸಿದರೆ ಉಳಿದ ಇಲಾಖೆ ಅಧಿಕಾರಿಗಳು ಸಭೆಗೆ ಬಂದಿಲ್ಲ. ಸ್ವಾತಂತ್ರ‍್ಯ ದಿನಾಚರಣೆಯಂತಹ ಮಹತ್ವದ ಸಭೆಗೆ ಗೈರಾದರೆ ಹೇಗೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರತ್ನದೀಪ ಕಸ್ತೂರೆ ಹಾಗೂ ಬಸವರಾಜ ಹಳ್ಳೆ ಒತ್ತಾಯಿಸಿದರು. ಇದು ರಾಷ್ಟ್ರೀಯ ಕಾರ್ಯಕ್ರಮ. ಯಾರು ಹೇಳಿಸಿಕೊಳ್ಳಬಾರದು. ಎಲ್ಲರೂ ಸಂತೋಷದಿಂದ ಪಾಲ್ಗೊಳ್ಳಬೇಕು. ವಿನಾ ಕಾರಣ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ತಹಶೀಲ್ದಾರ್ ಮಹೇಶ ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.