ADVERTISEMENT

ಯೋಗದಿಂದ ಮನೋಬಲ ವೃದ್ಧಿ

ಕ್ಷೇಮಕ್ಕಾಗಿ ಯೋಗ ಕಾರ್ಯಾಗಾರ: ಪ್ರೊ. ವಿನಾಯಕ ಕೊತಮಿರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 16:28 IST
Last Updated 24 ಜೂನ್ 2021, 16:28 IST

ಮನ್ನಳ್ಳಿ (ಜನವಾಡ): ನಿಯಮಿತ ಯೋಗದಿಂದ ಮನೋಬಲ ವೃದ್ಧಿಸುತ್ತದೆ ಎಂದು ಪ್ರಾಚಾರ್ಯ ಪ್ರೊ. ವಿನಾಯಕ ಕೊತಮಿರ ಅಭಿಪ್ರಾಯಪಟ್ಟರು.

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕ್ಷೇಮಕ್ಕಾಗಿ ಯೋಗ ಕುರಿತು ಆನ್‍ಲೈನ್‍ನಲ್ಲಿ ಏರ್ಪಡಿಸಿದ್ದ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಯೋಗವು ಮನುಷ್ಯನ ಮಾನಸಿಕ ಒತ್ತಡ ನಿವಾರಿಸುತ್ತದೆ. ಸಮಚಿತ್ತ ಕಾಯ್ದುಕೊಳ್ಳಲು ನೆರವಾಗುತ್ತದೆ. ದೈಹಿಕವಾಗಿ ಸದೃಢಗೊಳಿಸಿ ರೋಗಗಳಿಂದ ದೂರ ಇರಿಸುತ್ತದೆ ಎಂದು ತಿಳಿಸಿದರು.

ADVERTISEMENT

ಓದಿನಲ್ಲಿ ಏಕಾಗ್ರತೆ ಕಾಯ್ದುಕೊಳ್ಳಲು ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಯೋಗದ ಅನೇಕ ಪ್ರಕಾರಗಳು ಸ್ಮರಣ ಶಕ್ತಿ ಹೆಚ್ಚಳಕ್ಕೆ ಕೂಡ ಸಹಕಾರಿಯಾಗಿವೆ ಎಂದು ಹೇಳಿದರು.

ಧ್ಯಾನದಿಂದ ಶಾಂತಿ, ನೆಮ್ಮದಿ, ವಿಶ್ರಾಂತಿ ದೊರಕುತ್ತದೆ. ಪರೀಕ್ಷೆ ಸಮಯದಲ್ಲಿ ಯೋಗ ಹಾಗೂ ಧ್ಯಾನ ಮಾಡುವುದರಿಂದ ಒತ್ತಡ, ಆತಂಕ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಭಾರತೀಯ ಸಂಸ್ಕೃತಿಯಲ್ಲಿ ಯೋಗಕ್ಕೆ ಬಹಳ ಮಹತ್ವ ಇದೆ ಎಂದು ಸಂಪನ್ಮೂಲ ವ್ಯಕ್ತಿ ಪ್ರೊ. ಗುರುನಾಥ ಮೂಲಗೆ ಹೇಳಿದರು.

ಯೋಗ ಮನಸ್ಸನ್ನು ಸದಾ ಉಲ್ಲಸಿತವಾಗಿಡುತ್ತದೆ. ಅಧ್ಯಯನ, ಕೆಲಸ, ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕಿ ಊರ್ವಶಿ ಕೊಡ್ಲಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಮನ್ವಯಾಧಿಕಾರಿ ಡಾ. ಸಂಜೀವಕುಮಾರ ತಾಂದಳೆ ಇದ್ದರು.

ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಕಾರ್ಯಾಗಾರ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.