ಬೀದರ್: ಒಂದು ವಾರದಿಂದ ಬೆಂಗಳೂರು, ಕೋಲಾರ, ತುಮಕೂರು, ಮಡಿಕೇರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಹಲವು ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಪರ್ಕಕ್ಕೆ ಬಂದಿರುವ ಕಾರಣ ವೈದ್ಯರ ಸಲಹೆಯ ಮೇರೆಗೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ 10 ದಿನಗಳವರೆಗೆ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಬೆಂಗಳೂರಿನ ವಿಕಾಸಸೌಧದ ಸಚಿವರ ಅಕ್ಕಪಕ್ಕದ ಕಚೇರಿ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ದೃಢಪಟ್ಟ ಅಧಿಕಾರಿಯೊಬ್ಬರು ಸಚಿವರ ಸಂಪರ್ಕಕ್ಕೆ ಬಂದಿದ್ದರು. ಬೀದರ್ ಜಿಲ್ಲೆಯಲ್ಲಿಯೂ ಚವಾಣ್ ಅನೇಕ ಕಡೆಗಳಿಗೆ ತೆರಳಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸಹ ಜನತೆಯ ಅಹವಾಲುಗಳನ್ನು ಸ್ವೀಕರಿಸಿದ್ದರು.
ಕ್ವಾರಂಟೈನ್ನಲ್ಲಿದ್ದರೂ ನಿರಂತರ ಅಧಿಕಾರಿಗಳ ಸಂಪರ್ಕದಲ್ಲಿದ್ದು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ, ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ನಿರ್ದೇಶನಗಳನ್ನು ನೀಡಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ತಿಳಿಸಿದ್ದಾರೆ.
ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಸಚಿವರ ಮೊಬೈಲ್ಗೆ ಸಾರ್ವಜನಿಕರು ಸಂಪರ್ಕಿಸಬಹುದು. ಕಚೇರಿ ಕೆಲಸಗಳಿಗೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ(8073397831), ಆಪ್ತ ಸಹಾಯಕ ಪ್ರಶಾಂತ(9980218156), ಜೈಪಾಲ್(9901108283) ಅಥವಾ ಸಂಜೀವಕುಮಾರ(6363505741) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.