ಬೀದರ್: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಪೊಲೀಸರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಹಾರಾಷ್ಟ್ರ ಕಡೆಯಿಂದ ಮರಳು ತುಂಬಿದ ವಾಹನಗಳು ಅಕ್ರಮವಾಗಿ ಜಿಲ್ಲೆಯೊಳಗೆ ಪ್ರವೇಶಿಸುತ್ತಿವೆ. ಕೆಲವೆಡೆ ನಿಗದಿತ ಮಿತಿಗಿಂತ ಹೆಚ್ಚಿನ ಭಾರದ ವಾಹನಗಳು ರಸ್ತೆಯ ಮೇಲೆ ಸಂಚರಿಸುತ್ತಿವೆ. ಗ್ರಾಮೀಣ ರಸ್ತೆಗಳ ಮೂಲಕ ಭಾರದ ಮರಳು ಹೊತ್ತ ವಾಹನಗಳು ಸಂಚರಿಸುತ್ತಿರುವ ಕಾರಣ ಪದೇ ಪದೇ ರಸ್ತೆಗಳು ಹದಗೆಡುತ್ತಿವೆ. ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ ಎನ್ನುವ ದೂರುಗಳು ನಾಗರಿಕರಿಂದ ಬರುತ್ತಿವೆ ಎಂದು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಗಣಿ ಮತ್ತು ಭೂವಿಜ್ಞಾನಗಳ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸಮನ್ವಯದಿಂದ ಗಡಿ ಭಾಗಗಳಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕು. ಒಂದೇ ಪರವಾನಗಿ ಬಳಸಿ ಹಲವು ಟ್ರಿಪ್ ಸಾಗಾಟ, ನಿಯಮ ಮೀರಿ ಮರಳು ಸಾಗಾಣಿಕೆ ಮಾಡುವವರನ್ನು ಗುರುತಿಸಿ ನಿಯಮಾನುಸಾರ ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.