ಜನವಾಡ: ಬೀದರ್ ತಾಲ್ಲೂಕಿನ ಜನವಾಡದ ಸರ್ಕಾರಿ ಕನ್ನಡ, ಉರ್ದು ಹಾಗೂ ಮರಾಠಿ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶಾಸಕ ರಹೀಂಖಾನ್ ಸೋಮವಾರ ಅನಿರೀಕ್ಷಿತ ಭೇಟಿ ನೀಡಿದರು.
ಶಿಕ್ಷಕರ ಹಾಜರಾತಿ ಪರಿಶೀಲಿಸಿದರು. ಎಲ್ಲ ಶಿಕ್ಷಕರು ಪ್ರತಿ ದಿನ ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಪಾಠ ಮಾಡುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ಸೂಚಿಸಿದರು.
ವರ್ಗ ಕೋಣೆಗಳಿಗೆ ತೆರಳಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಪಠ್ಯ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿವೆಯೇ ಎಂದು ಪ್ರಶ್ನಿಸಿದರು. ಆಗ ಗಣಿತ ವಿಷಯದ ಸಮಸ್ಯೆಯನ್ನು ವಿದ್ಯಾರ್ಥಿಗಳು ಗಮನಕ್ಕೆ ತಂದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕೊರತೆ ಇರುವ ಶಿಕ್ಷಕರ ವಿಷಯಗಳ ವಿಶೇಷ ತರಗತಿ ನಡೆಸಬೇಕು. ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳಿಗೆ ಒತ್ತು ಕೊಡಬೇಕು. ಕಾಲಕಾಲಕ್ಕೆ ಪೋಷಕರ ಸಭೆ ಕರೆದು ಮನೆಯಲ್ಲೂ ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡಿದರು.
ಶಾಲೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹10 ಲಕ್ಷ ಅನುದಾನದಲ್ಲಿ ನಿರ್ಮಿಸಿದ ಶೌಚಾಲಯ ಹಾಗೂ ₹10 ಲಕ್ಷ ಅನುದಾನದಲ್ಲಿ ಕಟ್ಟಿದ ಶಾಲಾ ಕಚೇರಿ ಕಟ್ಟಡವನ್ನು ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.