ಕಮಲನಗರ: ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನ ವಿದ್ಯಾ ರ್ಥಿಗಳಾದ ನಾಗರಾಜ, ತಿಲಕ್ ಅವರು ಕೇಂದ್ರ ಲೋಕ ಸೇವಾ ಆಯೋಗ ನಡೆಸಿರುವ ರಾಷ್ಟ್ರೀಯ ರಕ್ಷಣಾ ಸಂಸ್ಥೆ(ಎನ್ಡಿಎ)ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅತ್ಯತ್ತಮ ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.
ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿ ಬುಧವಾರ ಎನ್ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಚಿತ್ತಾಪುರ ತಾಲ್ಲೂಕಿನ ಮೊಗಲಾ ಗ್ರಾಮದ ನಾಗರಾಜ ರಾಜಶೇಖರ ಹಳಿಮನಿ, ಬಸವಕಲ್ಯಾಣದ ತಿಲಕ್ ವಿಶ್ವನಾಥ ಮತಗೊಂಡ ಅವರನ್ನು ಸನ್ಮಾನಿಸಿ ಮಾತನಾಡಿದರು.
ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವುದು ಕಷ್ಟದ ಕೆಲಸ. ಅಂತಹದರಲ್ಲಿ ಗಡಿಭಾಗದ ವಿದ್ಯಾರ್ಥಿಗಳು ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಇವರ ಸಾಧನೆ ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಮಾದರಿಯಾಗಿದೆ. ಗುರಕುಲದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಿ ಸಿದ್ಧಗೊಳಿಸುತ್ತಿರುವುದು ಸಂತಸದ ಸಂಗತಿ ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಮಾತನಾಡಿ, ‘ಡಾ. ಬಸವಲಿಂಗ ಪಟ್ಟದ್ದೇವರು ಮತ್ತು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಗಡಿಭಾಗದಲ್ಲಿಶೈಕ್ಷಣಿಕ ಕ್ರಾಂತಿ ಮಾಡುತ್ತಿದ್ದಾರೆ’ ಎಂದರು.
ಮುಖಂಡ ಬಂಡೆಪ್ಪ ಕಂಟೆ, ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ಯುವ ಮುಖಂಡ ಪ್ರತೀಕ ಚವಾಣ್, ನಾಗರಾಜ, ದಿಲೀಪ ಚವಾಣ್, ಖಾಸಗಿ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್ ಹಿರೇಮಠ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.