ಬೀದರ್: ‘ಮಹಿಳೆಯರಿಗೆ ಇನ್ನೂ ಉತ್ತಮ ಶಿಕ್ಷಣ ಕೊಟ್ಟು ಇನ್ನಷ್ಟು ಸದೃಢರಾಗಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪ ಕೆ.ಕನಕಟ್ಟೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಪೋಷಣ ಅಭಿಯಾನ ಯೋಜನೆ ಮತ್ತು ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಪೋಷಣ್ ಪಕ್ವಾಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲದರಲ್ಲೂ ಮೇಲುಗೈ ಸಾಧಿಸುತ್ತಿದ್ದಾರೆ. ಆದರೆ, ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಅದಕ್ಕಾಗಿ ಎಲ್ಲಾ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕಿದೆ’ ಎಂದರು.
ಸಂಪನ್ಮೂಲ ವ್ಯಕ್ತಿ ಪೂರ್ಣಿಮಾ ಜಾರ್ಜ್ ಮಾತನಾಡಿ, ‘ಪ್ರಚಲಿತ ವಿದ್ಯಾಮಾನಗಳಲ್ಲಿ ಮಹಿಳೆಯರ ಪಾತ್ರ ಮತ್ತು ಸವಾಲುಗಳ’ ಕುರಿತು ಮಾತನಾಡಿದರು. ಡಾ. ಆರತಿ, ‘ಮಹಿಳೆಯರು ಮತ್ತು ಆರೋಗ್ಯ’ ಕುರಿತು ವಿಶೇಷವಾಗಿ ಮಹಿಳೆಯರ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮನ್ನೊಳ್ಳಿ, ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಸುವರ್ಣಾ, ಬೀದರ್ ಶಿಶು ಅಭಿವೃದ್ಧಿ ಯೋಜನೆಯ ಶಾರದಾ ಕಲ್ಮಲಕರ್, ಗೌರಿಶಂಕರ ಪರತಾಪೂರೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.